ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿದ್ಧಗಂಗೆಯ ಶಿವಕುಮಾರ ಶ್ರೀಗಳು(ದಿನಾಂಕ 01-04 -2024 ರಂದು ಜರುಗುವ ಶಿವಕುಮಾರ ಶ್ರೀಗಳ ಹುಟ್ಟು ಹಬ್ಬದ ಅಂಗವಾಗಿ ಬರೆದ ಲೇಖನ)

111 ವರ್ಷಗಳ ಸಾರ್ಥಕ ಬದುಕನ್ನು ಬಾಳಿದ ಸಿದ್ಧಗಂಗಾ ಮಠದ ಶ್ರೀಗಳಾದ ಡಾ.ಶಿವಕುಮಾರ ಮಹಾಸ್ವಾಮಿಗಳರವರ ಸೇವಾ ಕಾರ್ಯಗಳು ಅನನ್ಯ. ಜಾತಿ-ಧರ್ಮಗಳನ್ನು ಮೀರಿದ ನಿಸ್ವಾರ್ಥ ಸೇವೆ ಕಾರ್ಯಗಳು ಇಂದಿಗೂ-ಎಂದೆಂದಿಗೂ ಅಜರಾಮರ.ಲಕ್ಷಾಂತರ ಜನರ ಬಾಳಿಗೆ ಬೆಳಕಾದ ‘ನಡೆದಾಡುವ ಶರಣರು,’ಅನ್ನ,ಅಧ್ಯಾತ್ಮ,ಜ್ಞಾನವೆಂಬ ತ್ರಿವಿಧ ದಾಸೋಹದಿಂದ ಜಗತ್ತಿಗೇ ಮಾದರಿಯಾದ 21 ನೇ ಶತಮಾನದ ಸಂತ.ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣ ತಜ್ಞ, ಲಿಂಗಾಯತ ಧರ್ಮದ ಶ್ರೇಷ್ಠ ತ್ಯಾಗಿ,ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿ,ನಾಡನ್ನು ಬೆಳಗಿ,ನಡೆದಾಡುವ ಶರಣರಾಗಿ ಅಮರರಾಗಿದಾರೆ.
12 ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ “ಕಾಯಕವೇ ಕೈಲಾಸ” ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಶ್ರೀಗಳು.ಮಾರ್ಚ್ 3,1930 ರಂದು ಶ್ರೀ ಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠವು,ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದು ನೋಡುತ್ತೇವೆ.ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿದ್ದರು.ಇವರು ಸಮಾಜದ ಎಷ್ಟೋ ಬಡ ಮಕ್ಕಳ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ.ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದರು ಬಂಧುಗಳೆ.

ಶ್ರೀಗಳು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡ ಸಂದರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು.ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿಧ್ಯಾರ್ಥಿಗಳ ಸ-ನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು. ಮಠದ ಭೂಮಿಯೆಲ್ಲಾ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು.ಇದನ್ನೆಲ್ಲಾ ಧೈರ್ಯವಾಗಿ ಮೆಟ್ಟಿ ನಿಂತ ಶ್ರೀಗಳು ಭಕ್ತರ ಮನೆಗೆ ಭಿನ್ನಹವೇ ಮೊದಲಾದ ಆದ್ಯತೆಗಳ ಮೇರೆಗೆ ನಡೆದುಕೊಂಡೇ ಹೋಗಿ ಅಲ್ಲಿಂದ ಧವಸ ಧಾನ್ಯಗಳನ್ನು ತಂದಿದ್ದೂ ಉಂಟು.ಬರಿಯ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ದಿನ ನಿತ್ಯ ಮಠದಲ್ಲಿ ನಡೆಯಬೇಕಾದ ಧಾರ್ಮಿಕ ಕಾರ್ಯಗಳು, ಮಠಕ್ಕೆ ಭಕ್ತರ ಹಾಗು ಗಣ್ಯರ ಭೇಟಿ,ಮಠದ ಅರ್ಥಿಕ ನಿರ್ವಹಣೆಗಳೂ ಸೇರಿ ಶ್ರೀಗಳಿಗೆ ಬಿಡುವಿಲ್ಲದ ಕಾರ್ಯ ಪಟ್ಟಿಯೇ ಇರುತ್ತಿತ್ತು.ಆರಂಭದ ದಿನಗಳಲ್ಲಿ ‘ಶ್ರೀಗಳು ಇವನ್ನೆಲ್ಲ ನಿಭಾಯಿಸಲು ಸಾಧ್ಯವಿಲ್ಲ’ಎಂಬ ಆಡು ನುಡಿಗಳೂ ಕೇಳಿಬಂದಿದ್ದವು.ಇದ್ಯಾವುದಕ್ಕೂ ಧೃತಿಗೆಡದ ಶ್ರೀಗಳು ಪೂಜ್ಯ ಲಿ.ಶ್ರೀ ಅಟವಿ ಸ್ವಾಮಿಗಳ ಹಾಗು ಲಿ.ಶ್ರೀ ಉದ್ಧಾನ ಸ್ವಾಮಿಗಳ ಆಶಯದಂತೆ ಯಾವುದೇ ತೊಡಕುಗಳಾಗದಂತೆ ಮಠದ ಶಿಕ್ಷಣ ಸಂಸ್ಥೆಗಳನ್ನು,ವಿದ್ಯಾರ್ಥಿ ನಿಲಯಗಳನ್ನು,ಪ್ರಸಾದ ನಿಲಯಗಳನ್ನು ಸಮರ್ಥವಾಗಿ ಮುನ್ನಡೆಸಿದ್ದು ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಐತಿಹಾಸಿಕ ಕ್ರಾಂತಿಕಾರಿ ಬದಲಾವಣೆಗೆ ಸಾಕ್ಷಿಯಾಗಿದರು.
ಇನ್ನು ಶ್ರೀಗಳು ಶಿಕ್ಷಣ ಮತ್ತು ತರಬೇತಿಗಾಗಿ ಒಟ್ಟು 132 ಕ್ಕೂ ಹೆಚ್ಚು ಸಂಸ್ಥೆಗಳನ್ನು ಸ್ಥಾಪಿಸಿದರು. ನರ್ಸರಿಯಿಂದ ಎಂಜಿನಿಯರಿಂಗ್,ವಿಜ್ಞಾನ,ಕಲೆ ಮತ್ತು ನಿರ್ವಹಣೆ ಜೊತೆಗೆ ವೃತ್ತಿಪರ ತರಬೇತಿಯೂ ಸಹ ಇವೆ.ಅವರು ಆಧುನಿಕ ಶಿಕ್ಷಣ ಮತ್ತು ತಂತ್ರಜ್ಞಾನದಲ್ಲಿ ಶಿಕ್ಷಣ ನೀಡುವ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ಸೈ ಎನಿಸಿಕೊಂಡಿದರು.ಅಲ್ಲದೆ ಶ್ರೀ ಮಠದಲ್ಲಿ 10000 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದೆ.5 ವಯಸ್ಸಿನಿಂದ 16 ವರ್ಷ ವಯಸ್ಸಿನ ಯಾವುದೇ ಹಂತದಲ್ಲಿ ಮತ್ತು ಉಚಿತ ಆಹಾರ,ಶಿಕ್ಷಣ ಮತ್ತು ಆಶ್ರಯ (ತ್ರಿವಿಧ ದಾಸೋಹ) ಅನ್ನು ಒದಗಿ,ಎಲ್ಲಾ ಧರ್ಮ,ಜಾತಿ ನೋಡದೆ ಎಲ್ಲಾ ಮಕ್ಕಳಿಗೆ ಉಚಿತವಾಗಿ ತೆರೆದಿರುತ್ತದೆ.ಶ್ರೀ ಮಠದ ಯಾತ್ರಾರ್ಥಿಗಳು ಮತ್ತು ಸಂದರ್ಶಕರು ಕೂಡಾ ಉಚಿತ ಊಟದ ವ್ಯವಸ್ಥೆ ಇದೆ. ಹೀಗೆ ಶಿಕ್ಷಣ,ದಾಸೋಹ ಮತ್ತು ಸಾಮಾಜಿಕ ಕೆಲಸಗಳಲ್ಲಿ ಬದುಕಿನುದ್ದಕ್ಕೂ ತೊಡಗಿಸಿಕೊಂಡು ಜನಸಾಮಾನ್ಯರ ನೋವುಗಳಿಗೆ ಸ್ಪಂದಿಸುವ ಕೆಲಸ ನಿತ್ಯ ನಿರಂತರವಾಗಿ ಮಾಡಿದರು.ಹೀಗಾಗಿಯೇ ಇವರನ್ನು ನಡೆದಾಡುವ ದೇವರು,ಶರಣರು ಎಂದು ಜನಸಾಮಾನ್ಯರು ಪ್ರೀತಿಯಿಂದ ಕರೆಯುತ್ತಾರೆ.

ಪ್ರಶಸ್ತಿಗಳು:ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ 1965ರಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.ಪೂಜ್ಯ ಸ್ವಾಮೀಜಿಯವರ 100ನೆ ವರ್ಷದ ಹುಟ್ಟು ಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಗೌರವಿಸಿದೆ. 2015ರಲ್ಲಿ ಭಾರತ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಪ್ರಾತಃ ಸ್ಮರಣೀಯ ಸೇವಾ ಕಾರ್ಯ:
1941ರಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ ಶ್ರೀಗಳು,ಶ್ರೀ ಸಿದ್ಧಗಂಗಾ ಮಠದ ಸ್ವರೂಪ ಆಮೂಲಾಗ್ರವಾಗಿ ಬದಲಾವಣೆ ಮಾಡಿ,ಅಭಿವೃದ್ಧಿ ಪಥದಲ್ಲಿ ಸಾಗಿಸಿ, ತಮ್ಮ ವೈಯುಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷಗಳ ಕಾಲ ನಿರಂತರವಾಗಿ ಅವಕಾಶವಂಚಿತ ಮಕ್ಕಳಿಗೆ ಜಾತಿ,ಮತ, ಅಂತಸ್ತುಗಳನ್ನೆಣಿಸದೇ ಅನ್ನ ದಾಸೋಹದ ಜೊತೆಗೆ ಅಕ್ಷರವನ್ನು ಕಲಿಸಿ ಅವರ ಬಾಳು ಉತ್ತಮ ಮಾರ್ಗದಲ್ಲಿ ಸಾಗಲು ಅಡಿಗಲ್ಲು ಹಾಕಿಕೊಟ್ಟ ಧೀಮಂತ ಸಂತ,ಆಧ್ಯಾತ್ಮಿಕವಾಗಿ,ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಅನನ್ಯ ಸೇವೆ ಸಲ್ಲಿಸುತ್ತಾ ಬಂದಿರುವ
ಸಿದ್ದಗಂಗೆಯ ಸಿದ್ದಿಪುರುಷರು ಪೂಜ್ಯ ಸ್ವಾಮೀಜಿಯವರ ನಿಸ್ವಾರ್ಥ ಸೇವಾ ಕಾರ್ಯಗಳಿಗೆ ದೇಶದ ಜನತೆಗೆ ಇಂದಿಗೂ ಎಂದೆಂದಿಗೂ ಪ್ರಾತಃ ಸ್ಮರಣೀಯರಾಗಿದ್ದಾರೆ.

ಭಕ್ತಿಯ ನಮನಗಳು:ಸದ್ದು ಗದ್ದಲವಿರದ ಸಾಧನೆಯಿಲ್ಲಿ ಗದ್ದುಗೆಯೇರಿ,ಕಾಯಕವೇ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿ.ಕಾವಿಯುಡುಗೆಯನುಟ್ಟು ನಭವೇ ಕಿರಣ ಹಸ್ತವ ಚಾಚಿ,ಎಲ್ಲಾ ನನ್ನವರೆನ್ನುವ ಭಾವದ ಕರುಣೆಯೇ ಕಣ್ತೆರೆದಿದೆ ನೋಡಾ ಎನ್ನುವಂತೆ ಬದುಕಿ, ಸರ್ವ ಜನಾಂಗದವರ ಮೆಚ್ಚುಗೆಗೆ ಪಾತ್ರರಾಗಿ,ನಮ್ಮೆಲ್ಲರ ಸ್ಪೂರ್ತಿಯ ಚೇತನರ ದಿವ್ಯ ಅಂತರಾತ್ಮಕ್ಕೆ ಭಕ್ತಿಯ ಶರಣಾರ್ಥಿಯ ನಮನಗಳು ಸಲ್ಲಿಸುತ್ತೇವೆ.ಪ್ರಾತಃ ಸ್ಮರಣೀಯ ಸಿದ್ಧಗಂಗೆಯ ಶಿವಕುಮಾರ ಶ್ರೀಗಳು.

ಲೇಖಕರು-ಸಂಗಮೇಶ ಎನ್ ಜವಾದಿ,
ಬರಹಗಾರರು,ಚಿಂತಕರು,ಹೋರಾಟಗಾರರು ಬೀದರ ಜಿಲ್ಲೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ