ಬೀದರ್: ಪರಿಶ್ರಮ ಮತ್ತು ಬದ್ಧತೆಯಿಂದ ಅಭ್ಯಾಸ ನಡೆಸಿದ್ದಲ್ಲಿ ಮಾತ್ರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುರಿ ಸಾಧಿಸಲು ಸಾಧ್ಯವಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.
ಇಂದು ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿಯಲ್ಲಿರುವ ಬೀದರ್ ವಿಶ್ವವಿದ್ಯಾಲಯ ದ್ವಿತೀಯ ಸಂಸ್ಥಾಪನಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ನಾವು ಅಂಗನವಾಡಿಯಿಂದ ಪದವಿವರೆಗೆ ಶಿಕ್ಷಣ ಹಕ್ಕು ಕಾಯ್ದೆಯಡಿ ನೂರಾರು ಕೋಟಿ ರೂ. ಅನುದಾನ ನೀಡಿ ಶಿಕ್ಷಣಕ್ಕೆ ಒತ್ತು ಕೊಡುತ್ತಿದ್ದೇವೆ. ಆದರೆ ಪದವಿ ಪೂರ್ವ ಶಿಕ್ಷಣ, ಸ್ನಾತಕೋತ್ತರ ವಿಶ್ವವಿದ್ಯಾಲಯಗಳಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ವಿಶ್ವವಿದ್ಯಾಲಯಗಳು ವಿಭಾಗಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಪದವಿಗಳಿಗೆ ಮಾನ್ಯತೆ ಸಿಗುವಂತಾಗಬೇಕು ಎಂದರು. ವಿಶ್ವವಿದ್ಯಾಲಯ ಅಭಿವೃದ್ಧಿಯಾದರೆ ಮಾತ್ರ ಸಾರ್ಥಕವಾಗುತ್ತದೆ. ಬೀದರ್ ವಿಶ್ವವಿದ್ಯಾಲಯಕ್ಕೆ 124 ಕಾಲೇಜು ಸಂಯೋಜಿತ, ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಮಹಾವಿದ್ಯಾಲಯಗಳು ಇದ್ದು, 30 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಮುಂದಿನ ವರ್ಷ 40 ಸಾವಿರಗಿಂತ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಂತಾಗಬೇಕು ಎಂದು ನುಡಿದರು. ನಮ್ಮ ದೇಶದಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾರ್ಥಿಗಳು ಡಾಕ್ಟರ್, ಇಂಜಿನೀಯರ್ ಆಗಿದ್ದಾರೆ. ವಿಜ್ಞಾನಿಗಳಾಗಿ ಬಾಹ್ಯಕಾಶ, ತಂತ್ರಜ್ಞಾನದಲ್ಲಿದ್ದಾರೆ. ಜಗತ್ತನ್ನು ನಿರ್ಮಾಣ ಮಾಡುವಲ್ಲಿ ನಮ್ಮ ವಿದ್ಯಾರ್ಥಿಗಳು ಪಾಲು ದೊಡ್ಡದಿದೆ. ಇದೇ ಕಾರಣಕ್ಕೆ ವಿದೇಶಗಳು ನಮ್ಮ ದೇಶದ ಕಡೆ ಮುಖ ಮಾಡುತ್ತಿವೆ. ನಮ್ಮ ವಿದ್ಯಾರ್ಥಿಗಳಲ್ಲಿ ಯಾವುದೇ ಕೊರತೆ ಇಲ್ಲ. ಎಲ್ಲ ಗುರಿ ಮುಟ್ಟುವಂತೆ ಪರಿಶ್ರಮ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಮಾತನಾಡಿ, ಬೀದರ್ ವಿಶ್ವವಿದ್ಯಾಲಯಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂದು ಮಾಹಿತಿ ತಿಳಿದಿದ್ದು, ಕೂಡಲೇ ನಾನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಸೇರಿ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಒತ್ತು ನೀಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ,ಪೌರಾಡಳಿತ ಹಾಗೂ ಹಜ್ ಸಚಿವರಾದ ಶ್ರೀ ರಹೀಮ್ ಖಾನ್, ಪ್ರೊ. ಜಿ. ಎಸ್. ಬಿರಾದಾರ್, ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಎಂ.ಜಿ.ಮುಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ಬೀದರ್ ನಗರ ಸಭೆ ಅಧ್ಯಕ್ಷ ಮಹ್ಮದ್ ಗೌಸ್, ಬ್ಯಾಲಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಮೋತಿರಾಮ್, ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣಿ, ಬಿ.ಸಿ. ಶಾಂತಲಿಂಗ್ ಸಾವಳಗಿ, ಶಿವನಾಥ್ ಎಂ.ಪಾಟೀಲ್, ಸಚಿನ್ ಶಿವರಾಜ್, ವಿಠಲದಾಸ್ ಪ್ಯಾಗೆ, ಡಾ.ಮಲ್ಲಿಕಾರ್ಜುನ ಕನಕಟ್ಟೆ, ಅರ್ಜುನ್ ಕನಕ, ಅಬ್ದುಲ್ ಸತ್ತಾರ್ ಚಾಂದಸಾಬ್, ವೈಷ್ಣವಿ ಪಾಟೀಲ್, ಶಿಕ್ಷಣ ನಿಶಾಮ, ಆಡಳಿತ ಕುಲಸಚಿವೆ ಸುರೇಖಾ, ಮೌಲ್ಯಮಾಪನ ಕುಲಸಚಿವ ಪ್ರೋ. ಪರಮೇಶ್ವರ್ ನಾಯಕ್, ಶಿಕ್ಷಣ ನಿಕಾಯ ಡೀನರು ಹಾಗೂ ವಿಶ್ವವಿದ್ಯಾಲಯದ ಬೋಧಕ ಬೋಧಕೇತರು, ಸಿಬ್ಬಂದಿ ವರ್ಗದವರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ರೋಹನ್ ವಾಘಮಾರೆ
