
ಯಾದಗಿರಿ/ ಗುರುಮಠಕಲ್ :
2025-26ನೇ ಸಾಲಿನ ಗುರುಮಠಕಲ್ ತಾಲೂಕಿನ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಮಳೆ ಬಿತ್ತನೆ ಬೀಜ ದಾಸ್ತಾನು ರಸಗೊಬ್ಬರ ದಾಸ್ತಾನು ಪೂರ್ವ ಸಿದ್ಧತಾ ಕೃಷಿ ಚಟುವಟಿಕೆಗಳ ಕುರಿತಾದ ಸಭೆ ಇಂದು ಗುರುಮಠಕಲ್ ತಹಸಿಲ್ದಾರ್ ಕಚೇರಿಯಲ್ಲಿ ಜರುಗಿತು.
ಸಭೆಯಲ್ಲಿ ಗುರುಮಠಕಲ್ ತಹಸೀಲ್ದಾರ ಶಾಂತ ಗೌಡ ಬಿರಾದಾರ್, ಮಾನ್ಯ ಸಹಾಯಕ ಕೃಷಿ ನಿರ್ದೇಶಕರು ಯಾದಗಿರಿ,ಕೃಷಿ ಅಧಿಕಾರಿ ಮಲ್ಲಿಕಾರ್ಜುನ ವಾರದ, ಗುರುಮಠಕಲ್ ತಾಲೂಕಿನ ಕೃಷಿ ಅಧಿಕಾರಿ, ಕಂದಾಯ ನಿರೀಕ್ಷಕರು ಎಲ್ಲಾ ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಗಳು ಮತ್ತು ರೈತ ಮುಖಂಡರು ಪಾಲ್ಗೊಂಡಿದ್ದರು.
ಮಾನ್ಯ ಸಹಾಯಕ ಕೃಷಿ ನಿರ್ದೇಶಕರಾದ ಸುರೇಶ್ ಬಿ ಅವರು ಮಾತನಾಡಿ ರೈತರು ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳನ್ನು ಬಳಸುವ ಕುರಿತಾಗಿ ರೈತರಿಗೆ ಸಲಹೆ ತಿಳಿಸಿದರು.
ಕೆಳಕಂಡ ವಿಷಯಗಳನ್ನು ರೈತರಿಗೆ ವಿವರಿಸಲು ಸೂಚನೆ ನೀಡಲಾಯಿತು.
ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ, ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೋಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕಾಲ್ಸಿಯಂ, ಮೆಗ್ನೇಷಿಯಂ, ಗಂಧಕ, ಕಬ್ಬಿಣ, ಜಿಂಕ, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.
ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ, ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೋಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.
ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ : ರಂಜಕ : ಪೋಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಯಥೇಚ್ಚವಾಗಿ ಬಳಸುತ್ತಿರುವ ಸದರಿ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5.08:2.83:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ..
ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:13 ಹಾಗೂ ಪೋಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26: 12:32:16 22:22:14, 14:35:14, 17:17:17. 14:28:14, 9:19:19, 20:10:10 ಇತ್ಯಾದಿ ರಸಗೊಬ್ಬರಗಳನ್ನು ಸಹ ಬಳಸಬಹುದಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಲಹೆ ನೀಡಿದರು.
ರೈತರಿಗೆ ಪ್ರಮುಖ ಸಲಹೆಗಳು :
- ಭತ್ತ ಮತ್ತು ಹತ್ತಿ ಬೆಳೆಯ ಕುಳೆ ಸುಡುವುದನ್ನು ನಿಲ್ಲಿಸಬೇಕು. ಕುಳೆ ಸುಡುವುದರಿಂದ ಪರಿಸರ ಮಾಲಿನ್ಯವಾಗುತ್ತದೆ ಮತ್ತು ಭೂಮಿಯ ಫಲವತ್ತತೆ ಕಡಿಮೆಯಾಗುತ್ತದೆ, ಅಲ್ಲದೆ ಮಣ್ಣಿನಲ್ಲಿರುವ ಸೂಕ್ಷ್ಮ ಜೀವಿಗಳು ನಾಶವಾಗಿ, ಗಿಡದ ಬೇರುಗಳ ಪೋಷಕಾಂಶಗಳ ಹೀರುವ ಶಕ್ತಿ ಕಡಿಮೆಯಾಗುತ್ತದೆ. ಕುಳೆಯನ್ನು ರೋಟವೇಟರ್ನಿಂದ ಮಣ್ಣಿನಲ್ಲಿ ಸೇರಿಸಿ ನೀರು ಹಾಯಿಸಿ ಕೊಳೆಸಿದರೆ ಅದು ಉತ್ತಮ ಗೊಬ್ಬರವಾಗುತ್ತದೆ.
- ಎಲ್ಲಾ ರೈತರು ಅಧಿಕೃತ ಮಾರಾಟಗಾರರಿಂದ ಬಿ.ಟಿ. ಹತ್ತಿ ಬೀಜಗಳನ್ನು ಖರೀಸಬೇಕು. ಮತ್ತು ಬಿಲ್ನ್ನು ಕೇಳಿ ಪಡೆಯಬೇಕು. ಗಡಿ ಪ್ರದೇಶದಿಂದ ಬಂದು ಮಾರಾಟಮಾಡುವರಿಂದ, ಹಾಗೂ ಪೊಟ್ಟಣ ಮತ್ತು ಲೆಬಲ್ ರಹಿತ ಬೀಜಗಳನ್ನು ಖರೀದಿಸಬಾರದು.
- ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿ ಬಳಸಬೇಕು, ಸದರಿ ಗೊಬ್ಬರಗಳು ಎಲೆಯ ಮುಖಾಂತರ ಗಿಡಗಳಿಗೆ ನೇರವಾಗಿ ಪೋಷಕಾಂಶಗಳನ್ನು ನೀಡುತ್ತವೆ ಮತ್ತು ಉತ್ತಮ ಫಲಿತಾಂಶ ಕೊಡುತ್ತವೆ, ಅಲ್ಲದೆ ರಸಗೊಬ್ಬರಗಳ ಬಳಕೆ ಕಡಿಮೆಯಾಗಿ, ಮಣ್ಣಿನಲ್ಲಿ ಲವಣಾಂಶ ಮತ್ತು ರಸಸಾರ ಹೆಚ್ಚಾಗುವುದನ್ನು ತಪ್ಪಿಸುತ್ತವೆ.
ವರದಿ: ಜಗದೀಶ್ ಕುಮಾರ್ ಭೂಮಾ
