ಯಾದಗಿರಿ: ನಗರದ ಕನಕ ವೃತ್ತದ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಇಬ್ಬರು ಆರೋಪಿಗಳು ಪೆಟ್ರೋಲ್ ಸುರಿದು ಶನಿವಾರ ಬೆಳಗಿನ ಜಾವ ಬೆಂಕಿ ಹಚ್ಚಿದ್ದು, ಹವಾ ನಿಯಂತ್ರಣ ಉಪಕರಣ, ಸೋಫಾ ಮತ್ತು ಕುರ್ಚಿಗಳು ಸೇರಿದಂತೆ ಲಕ್ಷಾಂತರ ರೂಪಾಯಿಗಳ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿ ಹೋಗಿವೆ.
ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಮಂಜುಳಾ ಗೂಳಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಿದ್ದರಿಂದ ಕೋಪಗೊಂಡ ಪತಿ ಶಂಕರ ಗೂಳಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿರುವುದು ತನಿಖೆಯಿಂದ ಗೊತ್ತಾಗಿದೆ.
ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಶನಿವಾರ ಬೆಳಗಿನ ಜಾವ ಬೈಕ್ ಮೇಲೆ ಕಚೇರಿಗೆ ಬಂದು ಕಿಟಕಿ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದು ಕಂಡು ಬಂದ ಹಿನ್ನಲೆಯಲ್ಲಿ ಜಾಲ ಬೀಸಿ ಬಂಧಿಸಲಾಗಿದೆ.
ಪತಿಯ ತಪ್ಪಿನಿಂದಾಗಿ ಮಂಜುಳಾ ಗೂಳಿ ಅವರನ್ನು ಪಕ್ಷದಿಂದ ಸೌಮ್ಯ ರೆಡ್ಡಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ (AIMC) ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಯ ಪ್ರಸ್ತುತ ಪ್ರಧಾನ ಕಾರ್ಯದರ್ಶಿ ಅವರು ಪಕ್ಷದಿಂದ ಉಚ್ಚಾಟನೆ ಮಾಡಿರುವುದಾಗಿ ತಿಳಿದುಬಂದಿದೆ.
ವರದಿ: ಜಗದೀಶ್ ಕುಮಾರ್ ಭೂಮಾ
