ಬಾಗಲಕೋಟೆ/ಹುನಗುಂದ : ವ್ಯಕ್ತಿ ಮತ್ತು ಸಮಾಜಗಳ ಪ್ರಗತಿಗೆ ಶಿಕ್ಷಣವೇ ಪ್ರಮುಖ ಸಾಧನವಾಗಿದ್ದು ಸಾಮಾನ್ಯರಿಗೂ ಶಿಕ್ಷಣ ಸುಲಭವಾಗಿ ದೊರೆಯುವಂತಾಗಲು ಸರ್ಕಾರ ಸಾಕಷ್ಟು ಸೌಲಭ್ಯ ಮತ್ತು ಅವಕಾಶಗಳನ್ನು ಕಲ್ಪಿಸಿದ್ದು ವಿದ್ಯಾರ್ಥಿಗಳು ಮತ್ತು ಪಾಲಕರು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ನಿವೃತ್ತ ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಅಭಿಪ್ರಾಯ ಪಟ್ಟಿದ್ದಾರೆ.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 2025-26 ನೇ ಸಾಲಿನ ಕಾಲೇಜು ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಓದುವ ಅಭಿರುಚಿ, ಸತತ ಪ್ರಯತ್ನ, ಸಾಧಕರ ಜೀವನ ಚರಿತ್ರೆಯನ್ನು ಮಾದರಿಯಾಗಿಟ್ಟುಕೊಂಡು ಮುನ್ನಡೆದರೆ ಮಾತ್ರ ನಾವಿಟ್ಟುಕೊಂಡ ಗುರಿ ತಲುಪಿ ಮಾದರಿ ವ್ಯಕ್ತಿಗಳಾಗಲು ಸಾಧ್ಯ. ಇಂದಿನ ಸ್ಪರ್ಧಾತ್ಮಕ, ಅಂಕಪ್ರಧಾನ ಜಗತ್ತಿನಲ್ಲಿ ಸಾಧಕರಿಗೆ ವಿಪುಲ ಅವಕಾಶಗಳಿದ್ದು ಅವುಗಳನ್ನು ನಿಮ್ಮದಾಗಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಚಾರ್ಯ ಶರಣಪ್ಪ ಹೂಲಗೇರಿಯವರು ಪದವಿಪೂರ್ವ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನಿರಂತರವಾಗಿ ಪ್ರಯತ್ನಿಸುತ್ತಿದ್ದು ಕಳೆದ ವರ್ಷದಿಂದ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಪರೀಕ್ಷೆಗೆ ಸಿದ್ಧರಾಗಲು ಉಚಿತ ಆನ್ಲೈನ್ ತರಗತಿ ನಡೆಸುತ್ತಿದ್ದು ವಿದ್ಯಾರ್ಥಿಗಳು ಅದರ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಹಿರಿಯ ಸದಸ್ಯರಾದ ಚಂದ್ರಶೇಖರ ಚಟ್ನಿಹಾಳ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಹುಚ್ಚೇಶ ಕಾಳಹಸ್ತಿಮಠ, ಕಾಲೇಜು ಸಿಬ್ಬಂದಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೇವಂತಿ ಬೆಣಗಿ ಪ್ರಾರ್ಥಿಸಿದರು. ಉಪನ್ಯಾಸಕ ವಿ.ಕೆ ಶಶಿಮಠ ಸ್ವಾಗತಿದರು. ಎಚ್.ಟಿ.ಅಗಸಿಮುಂದಿನ ವಂದಿಸಿದರು. ಡಾ. ಎನ್. ವಾಯ್.ನದಾಫ್ ನಿರೂಪಿಸಿದರು.
- ಕರುನಾಡ ಕಂದ
