ಹುಬ್ಬಳ್ಳಿ : ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡ ಅವರ ಕೊಲೆ ಪ್ರಕರಣದ ಆರೋಪಿ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಜೂ. 6) ರದ್ದುಪಡಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಭೀತಿ ಶುರುವಾಗಿದೆ.
ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ವಿನಯ್ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿದ್ದಾರೆ. ವಿಶ್ವಾಸಾರ್ಹ ಪುರಾವೆಗಳಿಂದ ಇದು ದೃಢಪಟ್ಟಿದೆ. ಷರತ್ತುಗಳ ಉಲ್ಲಂಘನೆಯಾಗಿರುವ ಕಾರಣ ಜಾಮೀನನ್ನು ರದ್ದುಪಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
9 ತಿಂಗಳು ಜೈಲಿನಲ್ಲಿದ್ದ ವಿನಯ್ ಕುಲಕರ್ಣಿಗೆ ಆಗಸ್ಟ್ 11, 2021ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆಗಸ್ಟ್ 13ರಂದು ಅವರು ಜೈಲಿನಿಂದ ಹೊರಗೆ ಬಂದಿದ್ದರು. ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಅನೇಕ ಷರತ್ತುಗಳನ್ನು ವಿಧಿಸಿತ್ತು. ಅದರಲ್ಲಿ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಅನ್ನೋದು ಪ್ರಮುಖ ಷರತ್ತು. ಆದರೂ, ಈ ನಡುವೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿ ಶಾಸಕರಾಗಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
