ಬಳ್ಳಾರಿ : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬಾಲ ಭಿಕ್ಷಾಟನೆ ಹೆಚ್ಚಾಗುತ್ತಿದ್ದು, ಕಾಪಿ, ಪೆನ್ನು ಹಿಡಿಯುವ ಕೈಗಳಿಗೆ ಬರೆ ಬೀಳುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ 340 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ. ಸರ್ಕಾರವು ಕಾನೂನುಗಳನ್ನು ಜಾರಿಗೆ ತಂದರೂ, ಅಧಿಕಾರಿಗಳ ವೈಫಲ್ಯದಿಂದಾಗಿ ಇದು ನಿಯಂತ್ರಣಕ್ಕೆ ಬರುತ್ತಿಲ್ಲ. ಬಾಲ ಭಿಕ್ಷಾಟನೆ ನಿರ್ಮೂಲನೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪರಿಣಾಮಕಾರಿ ಕೆಲಸ ಮಾಡುತ್ತಿದೆ.
ರೈಲು, ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲೂ ಮಕ್ಕಳು ಭಿಕ್ಷಾಟನೆ ನಡೆಸುತ್ತಿರುವುದು ವಿಪರ್ಯಾಸ. ಕಳೆದ ನಾಲ್ಕು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಬರೋಬರಿ 340 ಜನರು ಬಾಲ ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ. ಬಾಲ ಕಾರ್ಮಿಕ ಪದ್ಧತಿ, ಬಾಲ ಭಿಕ್ಷಾಟನೆ ನಿರ್ಮೂಲನೆ ಕಾನೂನು ಜಾರಿಯಲ್ಲಿದ್ದರೂ ಸಹ ಅವುಗಳನ್ನು ನಿಯಂತ್ರಿಸಲು ಸಂಬಂಧ ಪಟ್ಟವರು ಸತತ ಪ್ರಯತ್ನ ಮಾಡುತ್ತಿದ್ದಾರೆ. ಅಕ್ಷರ ಕಲಿಯಬೇಕಿದ್ದ ಮಕ್ಕಳು ಭಿಕ್ಷಾಟನೆ ಮಾಡಬೇಕಾದ ಸ್ಥಿತಿ ಬಂದೊದಗಿರುವುದು ಈ ಅಂಕಿ-ಅಂಶಗಳೇ ಸಾಕ್ಷಿಯಾಗಿದ್ದು, ಈ ಮಹತ್ವದ ಮಾಹಿತಿ ಸ್ವತಃ ರಾಜ್ಯ ಮಕ್ಕಳ ನಿರ್ದೇಶನಾಲಯ ನೀಡಿದೆ.
ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಹೋಟೆಲ್, ಸಿನಿಮಾ ಥೇಟರ್, ಶಾಪಿಂಗ್ ಮಾಲ್ ಸೇರಿ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಪುಟ್ಟ ಮಕ್ಕಳ ಹಿಡಿದು ಮಹಿಳೆಯರು ನಿತ್ಯ ಭಿಕ್ಷಾಟನೆ ನಡೆಸುತ್ತಿದ್ದಾರೆ. ಪ್ರಯಾಣಿಕರು ಸೇರಿ ಜನಸಾಮಾನ್ಯರಿಗೆ ಭಿಕ್ಷಾಟನೆ ಸಮಸ್ಯೆಯಾಗಿ ಕಾಡುತ್ತಿದೆ. ಅದರಲ್ಲೂ ಬಾಲ ಭಿಕ್ಷಾಟನೆಗೆ ಕಟ್ಟು ನಿಟ್ಟಿನ ನಿಷೇಧವಿದ್ದರೂ ಇದನ್ನು ಅನುಷ್ಠಾನಕ್ಕೆ ತರಲು ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ.
ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವ ಹೆಚ್ಚುತ್ತಿರುವ ಕೊನೆ ಯಾವಾಗ ಎಂಬುದು ಪ್ರಶ್ನೆಯಾಗಿ ಉಳಿದಿದೆ.
ವರದಿ : ಜಿಲಾನಸಾಬ್ ಬಡಿಗೇರ್
