ಯಾದಗಿರಿ: ಯಾದಗಿರಿ ಜಿಲ್ಲೆಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶ್ರೀ ಪೃಥ್ವಿಶಂಕರ ಇವರು ಜಿಲ್ಲೆಯಲ್ಲಿ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಿ, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಇವರನ್ನು ಅವಧಿಯ ಮುಂಚಿತವಾಗಿ ವರ್ಗಾವಣೆ ಮಾಡುತ್ತಿರುವುದು ಸಾರ್ವಜನಿಕರ ಭಾರಿ ಅಕ್ರೋಶಕ್ಕೆ ಗುರಿಯಾಗಿದೆ.
ಕೇವಲ 7 ತಿಂಗಳ ಹಿಂದೆ ಯಾದಗಿರಿ ಜಿಲ್ಲೆಗೆ ಶ್ರೀ ಪೃಥ್ವಿಶಂಕರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ಬಂದ ಮೇಲೆ ಜಿಲ್ಲೆಯಲ್ಲಿ ಸತತವಾಗಿ ಎರಡು ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ, ಮಟ್ಕಾ, ಜೂಜಾಟ ಮತ್ತು ಇನ್ನಿತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಭ್ರಷ್ಟರ ಪಾಲಿಗೆ ಸಿಂಹ ಸ್ವಪ್ನವಾಗಿದ್ದು, ಇಂತಹ ಅಧಿಕಾರಿಗಳನ್ನು ಅವಧಿ ಮುಗಿಯದೆ ಇದ್ದರೂ ವರ್ಗಾವಣೆ ಮಾಡದಂತೆ ಮಾಜಿ ಸಚಿವರಾದ ರಾಜು ನಾಯಕ ಸೇರಿದಂತೆ ಜಿಲ್ಲೆಯ ಅನೇಕ ರೈತ ಸಂಘಟನೆ, ದಲಿತ ಸಂಘಟನೆ, ಸಾರ್ವಜನಿಕರಿಂದ ವ್ಯಾಪಕ ವಿರೋಧ ಬರುತ್ತಿದೆ.
ಮೊದಲೇ ಯಾದಗಿರಿ ಜಿಲ್ಲೆ ಹಿಂದುಳಿದ ಜಿಲ್ಲೆಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಕಾನೂನು ಸುವ್ಯವಸ್ಥೆಗೆ ಪೂರಕವಾಗಿ ಕೆಲಸ ಮಾಡುತ್ತಿರುವ ಪ್ರಾಮಾಣಿಕ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶ್ರೀ ಪೃಥ್ವಿಶಂಕರ ಇವರ ಅವಧಿ ಮುಂಚಿತವಾಗಿ ವರ್ಗಾವಣೆ ಮಾಡುತ್ತಿರುವ ಕುರಿತು ಅದನ್ನು ವಾಪಸ್ ಪಡೆಯಲು ಮುಖ್ಯಮಂತ್ರಿಗಳಿಗೆ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯನ್ನು ಮುಂದುವರೆಸಿ, ಜಿಲ್ಲೆಯ ಜನರ ಜನಾಕ್ರೋಶದಿಂದ ಮುಕ್ತರಾಗಿ, ಜಿಲ್ಲೆ ಜನತೆಗೆ ಪ್ರತಿಭಟನೆ ಮಾಡಲು ಅವಕಾಶ ನೀಡದೆ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುಕೂಲ ಮಾಡಲು ಪತ್ರದ ಮೂಲಕ ನರಸಿಂಹನಾಯಕ (ರಾಜೂಗೌಡ) ಮಾಜಿ ಸಚಿವರು ಮನವಿ ಮಾಡಿದ್ದಾರೆ.
ದಕ್ಷ ಅಧಿಕಾರಿಗಳ ರಕ್ಷಣೆಯಾದರೆ ಮಾತ್ರ ಒಳ್ಳೆ ಕಾನೂನು ಸುವ್ಯವಸ್ಥೆ ಉಳಿಯುತ್ತದೆ.
ವರದಿ: ಜಗದೀಶ್ ಕುಮಾರ್ ಭೂಮಾ



















