ಬೀದರ್/ ಚಿಟಗುಪ್ಪ: ಪರಿಸರ ಸಂರಕ್ಷಣೆ ಎಂದರೆ ನಮ್ಮ ಸುತ್ತಲಿನ ಪರಿಸರವನ್ನು ರಕ್ಷಿಸುವುದು ಮತ್ತು ಆರೋಗ್ಯಕರವಾಗಿಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸಾಹಿತಿ, ಪರಿಸರವಾದಿ, ಕಲ್ಯಾಣ ಕಾಯಕ ಪ್ರತಿಷ್ಠಾನದ ಅಧ್ಯಕ್ಷ ಸಂಗಮೇಶ ಎನ್. ಜವಾದಿ ಹೇಳಿದರು.
ತಾಲೂಕಿನ ಕಂದಗೋಳ ಗ್ರಾಮದ ಪೂಜ್ಯ ಚನ್ನಬಸವ ಪಟ್ಟದ್ದೇವರು ಗುರುಕುಲ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕಲ್ಯಾಣ ಕಾಯಕ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು
ನಾವೆಲ್ಲರೂ ಪರಿಸರವನ್ನು ಸಂರಕ್ಷಿಸಬೇಕಾದ ಅಗತ್ಯವಿದೆ. ಏಕೆಂದರೆ ಅದು ನಮ್ಮ ಜೀವನದ ಭಾಗ,
ಬದುಕಿಗೆ ಆಧಾರವಾಗಿದೆ. ಮರಗಿಡಗಳನ್ನು ನೆಡುವುದು, ನೀರನ್ನು ಉಳಿಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಸೌರಶಕ್ತಿಯಂತಹ ಪರಿಸರ ಸ್ನೇಹಿ ಶಕ್ತಿಯನ್ನು ಬಳಸುವುದು. ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಮತ್ತು ಪ್ರಾಮುಖ್ಯತೆ ಪಡೆದಿದೆ. ಇಲ್ಲವಾದಲ್ಲಿ ನಾವು ಪರಿಸರವನ್ನು ರಕ್ಷಿಸದಿದ್ದರೆ, ಅದು ನಮ್ಮ ಜೀವನದ ಮೇಲೆ ಮತ್ತು ಭವಿಷ್ಯದ ಪೀಳಿಗೆಯ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರುತ್ತದೆ ಎಂದರು.
ಪರಿಸರ ಸಂರಕ್ಷಣೆಯಿಂದ ಶುದ್ಧ ಗಾಳಿ ಮತ್ತು ನೀರು, ಆರೋಗ್ಯಕರ ಜೀವನಶೈಲಿ, ಜೀವವೈವಿಧ್ಯದ ಸಂರಕ್ಷಣೆ, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಹವಾಮಾನ ಬದಲಾವಣೆಯನ್ನು ತಡೆಯುವುದು ಸೇರಿದಂತೆ ಇನ್ನಿತರ ಹಲವು ಉಪಯುಕ್ತ ಕ್ರಮಗಳಿಂದ ನಾವೆಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯ.
ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ನಾವು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು.ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ತನ್ನ ಕೈಲಾದಷ್ಟು ಕೊಡುಗೆ ನೀಡಬೇಕು. ಅದು ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ನುಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕ ಸಿದ್ದು ಪೂಜಾರಿ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅನೇಕ ಪರಿಸರ ಸಂರಕ್ಷಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ. ವಿಶೇಷವಾಗಿ ರೈತರಿಗೆ ಸಸಿ ವಿತರಣೆ, ಶಾಲಾ ಹಂತದ ಮಕ್ಕಳಿಗೆ ಪರಿಸರ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಸಸಿ ನೆಡುವ ಕೆಲಸಗಳನ್ನು ನಿರಂತರವಾಗಿ ತಾಲೂಕಿನಾದ್ಯಂತ ಮಾಡುತ್ತಿದ್ದೇವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ,ಶಾಲೆಯ ಮುಖ್ಯ ಗುರುಗಳಾದ ರೇಖಾ ಮಂಜುನಾಥ ಮಾತನಾಡಿ ಪರಿಸರ ಮನುಷ್ಯನ ಜೀವನಕ್ಕೆ ಏನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾರೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೆದುರೆ ನಡೆಯಲಿದೆ. ಇದು ನಡೆಯಬಾರದೆಂದರೆ ಇಂದಿನಿಂದಲೆ ಪರಿಸರದ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಪರಿಸರದ ಸಂರಕ್ಷಣೆಗಾಗಿ ನಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತುವ ಅವಶ್ಯಕತೆ ಇಲ್ಲ. ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ ಎಂದರು.
ಕಾರ್ಯಕ್ರಮವನ್ನು ಶಿಕ್ಷಕ ಮಾಹಾದೇವ ಶೆಟ್ಟಿಗಾರ್ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು – ಶಿಕ್ಷಕಿಯರು, ಗಣ್ಯರು, ನಾಗರಿಕರು, ಮಾತೆಯರು, ವಿಧ್ಯಾರ್ಥಿಗಳು, ಮಕ್ಕಳು ಹಾಜರಿದ್ದರು.
- ಕರುನಾಡ ಕಂದ



















