ಧಾರವಾಡ : ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ವರಿಷ್ಠರು ಯಾರನ್ನು ಆಯ್ಕೆ ಮಾಡಬಹುದು ಎನ್ನುವ ಗೊಂದಲ ಇನ್ನೂ ಮುಂದುವರಿದಿದೆ. ರೆಬೆಲ್ ಟೀಂ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ವಿಜಯೇಂದ್ರ ಅವರನ್ನೇ ಮುಂದುವರಿಸಬೇಕೆಂದು ಮತ್ತೊಂದು ಬಣ ಬಿಗಿಪಟ್ಟು ಹಿಡಿದಿದೆ. ಹೀಗಾಗಿ ಬೇರೆ ಹಲವು ರಾಜ್ಯಗಳಲ್ಲಿ ಅಧ್ಯಕ್ಷರ ಘೋಷಣೆಯಾಗಿದ್ದರೂ, ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಇನ್ನೂ ಹೆಸರು ಘೋಷಣೆಯಾಗದೇ ವಿಳಂಬವಾಗಿತ್ತು. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಅಪ್ಡೇಟ್ ಕೊಟ್ಟಿದ್ದು, ವಿಳಂಬವಾಗಿದ್ದ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತೆ ಶುರುವಾಗಿದೆ. ರಾಜ್ಯ ಬಿಜೆಪಿ ಘಟಕಕ್ಕೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ಆಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಧಾರವಾಡದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಅಥವಾ ಬಿ.ವೈ.ವಿಜಯೇಂದ್ರ ಸೇರಿ ಯಾರೇ ಆಗಲಿ. ರಾಜ್ಯ ಬಿಜೆಪಿ ಘಟಕಕ್ಕೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ಆಗಲಿದೆ. ಎಲ್ಲಾ ರಾಜ್ಯಗಳಲ್ಲೂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅದರ ಜೊತೆ ನಮ್ಮ ರಾಜ್ಯ ಬಿಜೆಪಿಗೂ ಅಧ್ಯಕ್ಷ ಆಯ್ಕೆ ಆಗಲಿದೆ ಎಂದು ಹೇಳಿದರು.
ವರದಿ : ಜಿಲಾನಸಾಬ್ ಬಡಿಗೇರ್



















