ಬಳ್ಳಾರಿ / ಕಂಪ್ಲಿ : ಬಡವರ ಕಲ್ಯಾಣ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಡಿ.ದೇವರಾಜ ಅರಸು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಗ್ರೇಡ್-2 ತಹಶೀಲ್ದಾರ್ ಷಣ್ಮುಖಪ್ಪ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಿ.ದೇವರಾಜ ಅರಸು ಅವರ 119ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿ, ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು ಎಂಬ ಕಾರಣಕ್ಕೆ ವಿದ್ಯಾರ್ಥಿ ನಿಲಯಗಳನ್ನು ತೆರೆದು ಎಲ್ಲರೂ ಶಿಕ್ಷಣವಂತರಾಗಬೇಕು ಎಂಬ ಸಂಕಲ್ಪ ಮಾಡಿದರು. ಮನುಷ್ಯರನ್ನು ಮನುಷ್ಯರನ್ನಾಗಿ ನೋಡಬೇಕು’. ಹೊಲ ಉಳುವವನೇ ಒಡೆಯ ಎಂದು ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಕೆಳವರ್ಗದವರ ಬಾಳಿಗೆ ಬೆಳಕಾದರು’ ಎಂದರು.
ದೇವರಾಜ ಅರಸು ಹಿಂದುಳಿದ ವರ್ಗದ ವಸತಿ ನಿಲಯ ಪಾಲಕ ಗಾದಿಲಿಂಗಪ್ಪ ಮಾತನಾಡಿ, ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ದೇವರಾಜ ಅರಸು ಶ್ರಮಿಸಿದರು. ಅವರ ತತ್ವ–ಸಿದ್ಧಾಂತವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದೇವರಾಜು ಅರಸು ನೀಡಿರುವ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶಿರಸ್ತೇದಾರ ರಮೇಶ, ಎಫ್.ಡಿ.ಸಿ ಮೌನೇಶ, ನಿಲಯ ಪಾಲಕ ವಿರುಪಾಕ್ಷಿ, ಅಡುಗೆ ಸಹಾಯಕರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















