ಬೆಂಗಳೂರು : ದಸರಾ ಹಬ್ಬಕ್ಕೆ ದೇಶದ ಜನರಿಗೆ ಕೇಂದ್ರ ಸರ್ಕಾರದಿಂದ ಧಮಾಕ ಸಿಕ್ಕಿದೆ. ದೀಪಾವಳಿಗೆ ಡಬಲ್ ಖುಷಿ ಸಿಕ್ಕಿದೆ. ನವರಾತ್ರಿಗೆ ನಯಾ ತೆರಿಗೆ ಜಾರಿಯಾಗುತ್ತಿದೆ. ದರ ಏರಿಕೆ ಬರೆಯಿಂದ ಬಸವಳಿದಿದ್ದ ಜನಾಸಾಮಾನ್ಯರಿಗೆ ಕೇಂದ್ರ ಸರ್ಕಾರ ದೊಡ್ಡ ರಿಲೀಫ್ ನೀಡಿದೆ. ಜಿಎಸ್ಟಿಯಲ್ಲಿ (GST) ಭಾರೀ ಪರಿಷ್ಕರಣೆ ಮಾಡಲಾಗಿದ್ದು, ನಾಲ್ಕು ಸ್ಲ್ಯಾಬ್ಗಳನ್ನು 2 ಸ್ಲ್ಯಾಬ್ಗೆ ಇಳಿಸಲಾಗಿದೆ. ಸೆಪ್ಟಂಬರ್ 22 ರಿಂದ ಹೊಸ ತೆರಿಗೆ ಜಿಎಸ್ಟಿ ಸ್ಲ್ಯಾಬ್ಗಳು ಜಾರಿಯಾಗಲಿವೆ. ಆದರೆ, ಜಿಎಸ್ಟಿ ಪರಿಷ್ಕರಣೆಯಿಂದ ರಾಜ್ಯಗಳಿಗೆ ಆಗಬಹುದಾದ ಲಾಭ ನಷ್ಟದ ಲೆಕ್ಕಾಚಾರ ಈಗ ಶುರುವಾಗಿದೆ.
ಜಿಎಸ್ಟಿ ಪರಿಷ್ಕರಣೆಯಿಂದ ರಾಜ್ಯಗಳ ಮೇಲೆ ಬೀಳುತ್ತಾ ಹೊಡೆತ?
ದೇಶದ ಪ್ರತಿಯೊಬ್ಬ ನಾಗರಿಕನೂ ಪರೋಕ್ಷವಾಗಿ ಕಟ್ಟುವ ತೆರಿಗೆಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ನೇತೃತ್ವದಲ್ಲಿ ಬುಧವಾರ ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಅಳೆದು ತೂಗಿ ಜಿಎಸ್ಟಿ ಪರಿಷ್ಕರಣೆ ಮಾಡಲಾಗಿದೆ. ಶೇಕಡಾ 28 ರಷ್ಟು ತೆರಿಗೆಯನ್ನು ಶೇ 18ಕ್ಕೆ ಇಳಿಸಲಾಗಿದೆ. ಹಾಗೆಯೇ ಶೇಕಡಾ 18 ಮತ್ತು 12ರ ತೆರಿಗೆಯನ್ನು ಶೇಕಡಾ 5ಕ್ಕೆ ಇಳಿಸಲಾಗಿದೆ. ಸಭೆಯಲ್ಲಿ ರಾಜ್ಯಗಳ ಅಭಿಪ್ರಾಯ ಪಡೆದು ಈ ನಿರ್ಧಾರ ಮಾಡಲಾಗಿದೆ. ಆದರೆ, ಹಲವು ರಾಜ್ಯಗಳು ನಷ್ಟದ ಬಗ್ಗೆ ಪ್ರಸ್ತಾಪಿಸಿವೆ. ಅಲ್ಲದೇ, ಕೇಂದ್ರಕ್ಕೆ ಮನವಿಗಳನ್ನು ಮಾಡಿವೆ.
ಜಿಎಸ್ಟಿ ಪರಿಷ್ಕರಣೆ:
ರಾಜ್ಯಗಳ ವಾದವೇನು? ಆದಾಯ ಕುಂಠಿತವಾಗುವ ಬಗ್ಗೆ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ. ದಿಢೀರ್ ಜಿಎಸ್ಟಿ ಪರಿಷ್ಕರಣೆಯಿಂದ ರಾಜ್ಯಗಳಿಗೆ ಹೊಡೆತ ಬೀಳಬಹುದು. ರಾಜ್ಯಗಳ ಆದಾಯದ ಕುಂಠಿತವಾಗುತ್ತದೆ ಎಂದು ವಾದಿಸಿವೆ. ಉದಾಹರಣೆಗೆ; ಕರ್ನಾಟಕಕ್ಕೆ ಸುಮಾರು 15 ಸಾವಿರ ಕೋಟಿ ರೂ. ಆದಾಯದ ಕೊರತೆ ಎದುರಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ, ರಾಜ್ಯಗಳು ಜಿಎಸ್ಟಿ ಪರಿಷ್ಕರಣೆಯನ್ನು ನೇರವಾಗಿ ವಿರೋಧಿಸಲು ಸಾಧ್ಯವಾಗದಿದ್ದರೂ, ಕೊರತೆ ಎಂದು ವಾದ ಮುಂದಿಟ್ಟಿವೆ. ಜೊತೆಗೆ ರಾಜ್ಯಗಳ ಆದಾಯಕ್ಕೆ ಕೇಂದ್ರ ಸರ್ಕಾರ ರಕ್ಷಣೆ ನೀಡಬೇಕು. ಜಿಎಸ್ಟಿ ಸರಳೀಕರಣದಿಂದ ಕಂಪನಿಗಳಿಗೆ ಲಾಭ ಆಗಬಾರದು. ಜಿಎಸ್ಟಿ ಸರಳೀಕರಣದ ಲಾಭ ನೇರವಾಗಿ ಗ್ರಾಹಕರಿಗೆ ತಲುಪಬೇಕು. ಜಿಎಸ್ಟಿ ಪರಿಷ್ಕರಣೆಯಿಂದ ದೈನಂದಿನ ಅಗತ್ಯ ವಸ್ತುಗಳ ಅಗ್ಗ ವಾಗಲಿವೆ. ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕವನ್ನು ವಿಧಿಸಲಾಗುತ್ತದೆ. ಹೀಗಾಗಿ ಆದಾಯದ ಕೊರತೆ ಎದುರಿಸದಂತೆ ನೋಡಿಕೊಳ್ಳಲು ಪರಿಹಾರ ನೀಡಿ ಎಂದು ಜಿಎಸ್ಟಿ ಮಂಡಳಿ ಸಭೆಯಲ್ಲಿ ಬಿಜೆಪಿಯೇತರ ಆಡಳಿತದ ರಾಜ್ಯಗಳು ಆಗ್ರಹಿಸಿವೆ.
ವರದಿ : ಜಿಲಾನಸಾಬ್ ಬಡಿಗೇರ್



















