ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪೂರ ಗ್ರಾಮದ ಶ್ರೀ ಮಾರುತೇಶ್ವರ, ಬಸವೇಶ್ವರ ದೇವರ ಜಾತ್ರೆಯು ಇದೇ ತಿಂಗಳ ೨0 ರಿಂದ ೨೨ ರವೆಗೆ ವಿಜೃಂಭಣೆಯಿ೦ದ ಜರುಗುವುದು. ಭಕ್ತಾದಿಗಳು ಜಾತ್ರೆಗೆ ಆಗಮಿಸಿ ಮಾರುತೇಶ್ವರ ಹಾಗೂ ಬಸವೇಶ್ವರ ಕೃಪೆಗೆ ಪಾತ್ರರಾಗಬೇಕೆಂದು ತಿಮ್ಮಾಪೂರ ಗ್ರಾಮಸ್ಥರು ವಿನಂತಿಸಿದ್ದಾರೆ.
ದಿನಾಂಕ ೨೦ ರಂದು ಶನಿವಾರ ರಾತ್ರಿ೮-೦೦ ಕ್ಕೆ ಶ್ರೀ ಮಾರುತೇಶ್ವರ ಪಲ್ಲಕ್ಕಿ ಹಾಗೂ ನೂರಾರು ಭಕ್ತರು ಬರಿಗಾಲಿನಿಂದ ತಿಮ್ಮಾಪೂರ ಪತ್ರಿಗಿಡದ ಬಸವೇಶ್ವರನಿಗೆ ಪೂಜೆ ಸಲ್ಲಿಸಿ ಕಿರಸೂರ ಗ್ರಾಮಕ್ಕೆ ತೆರಳುತ್ತಾರೆ. ಕಿರಸೂರಿನ ಗ್ರಾಮಸ್ಥರು ಶ್ರೀ ಮಾರುತೇಶ್ವರ ಪಲ್ಲಕ್ಕಿ ಹಾಗೂ ಭಕ್ತರನ್ನು ಬರಮಾಡಿಕೊಂಡು ಅಲ್ಲಿನ ಹನಮಂತ ದೇವರಿಗೆ ಪೂಜೆ ಸಲ್ಲಿಸುವರು. ಅಲ್ಲಿಂದ ಕಿರಸೂರು ಗ್ರಾಮಸ್ಥರು ಡೊಳ್ಳಿನ ಸಂಗಡ ೫ ಕುಂಬಳ ಎಲೆ ತೆಗೆದುಕೊಂಡು ರಾತ್ರಿ ೧೨-೦೦ ಘಂಟೆಯ ಸುಮಾರಿಗೆ ಹಡಗಲಿ ಸಮೀಪದ ಮಲಪ್ರಭಾ ನದಿಗೆ ತೆರಳುತ್ತಾರೆ.
ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಿದ ನಂತರ ಹೊಳೆಯಲ್ಲಿ ಪೂಜೆ, ಪುನಸ್ಕಾರಗಳು ನಡೆಯುವವು. ಅಲ್ಲಿಂದ ಹೊರಟು ಹಡಗಲಿ ಗ್ರಾಮಕ್ಕೆ ತೆರಳಿ ಅಲ್ಲಿಯ ಹನಮಂತ ದೇವರಿಗೆ ಪೂಜೆ ಸಲ್ಲಿಸಿದ ನಂತರ ಅಲ್ಲಿ ಮುಂಜಾನೆ ೪-೦೦ ರ ಸುಮಾರಿಗೆ ಹನುಮಂತ ದೇವರ ಕಟ್ಟೆಯ ಮೇಲೆ ಮಾರುತೇಶ್ವರ ಪೂಜಾರಿಯು ಭವಿಷ್ಯದ ಮಳೆ, ಬೆಳೆ, ಹೇಳಿಕೆ ನಡೆಯುವದು. ನಂತರ ಪಲ್ಲಕ್ಕಿ ಹಾಗೂ ಭಕ್ತರಿಗೆ ಕುರಹಟ್ಟಿ ಸಹೋದರರು ಲಘು ಉಪಹಾರ ಸೇವೆಯನ್ನು ಸಲ್ಲಿಸುತ್ತಾರೆ. ಪ್ರಸಾದ ನಂತರ ಮರಳಿ ಪಲ್ಲಕ್ಕಿಯೊಂದಿಗೆ ಗ್ರಾಮಕ್ಕೆ ಬಂದು ತಲುಪುತ್ತಾರೆ.
ದಿನಾಂಕ ೨೧ರಂದು ರವಿವಾರ ಮುಂಜಾನೆ ೮=೦೦ ಕ್ಕೆ ಶ್ರೀ ಮಾರುತೇಶ್ವರ ಹಾಗೂ ಶ್ರೀ ಬಸವೇಶ್ವರ ದೇವರಿಗೆ ರುದ್ರಾಭಿಷೇಕ ನಡೆದು ಸಕಲ ವಾದ್ಯ-ಮೇಳದೊಂದಿಗೆ ಕಳಸದ ಮೆರವಣಿಗೆ. ನಂತರ ಗೋಪುರಕ್ಕೆ ಕಳಸಾರೋಹಣ, ಮುಂಜಾನೆ ೧೧=೦೦ ಕ್ಕೆ ಶ್ರೀ ಮಾರುತಿದೇವರ ಪಲ್ಲಕ್ಕಿಯನ್ನು ಶ್ರೀ ವಿರುಪಾಕ್ಷಗೌಡ ದಾದ್ಮಿಯವರ ಹೊಲದಿಂದ ದೇವಸ್ಥಾನಕ್ಕೆ ಕರೆತರಲಾಗುವುದು. ನಂತರ ಹೊಳೆಯಿಂದ ತಂದ ನೀರನ್ನು ದೇವರಿಗೆ ಸ್ನಾನ ಮಾಡಿಸುವುದು. ಮಧ್ಯಾಹ್ನ ೧೨=೦೦ ಘಂಟೆಗೆ ಪೂಜಾರಿಗಳಿಂದ ವಿಶಿಷ್ಟವಾದ ಹತಾರ ಸೇವೆ ನಡೆಯಲಿದೆ
ಅಂದು ಸಾಯಂಕಾಲ ೪=೦೦ ಪೂಜಾರಿ ಮನೆಯಿಂದ “ಮಾವಿನ ಮರತಪ್ಪ” ಎಂಬ ಹನಮಂತ ದೇವರ ಮೂರ್ತಿಯನ್ನು ಗುಡಿಗೆ ತರಲಾಗುತ್ತದೆ. ಸಾಯಂಕಾಲ ೫=೦೦ ಕ್ಕೆ ವಿಶಿಷ್ಟ ರೀತಿಯ ಹತಾರ ಸೇವೆಯೊಂದಿಗೆ ಇದೇ ಸಂದರ್ಭದಲ್ಲಿ ಸುತಕಾಯಿ (ತೆಂಗಿನಕಾಯಿ) ಒಡೆಯುವ ಕಾರ್ಯ ನಡೆಯುವುದು. ನಂತರ ಹನುಮಂತ ದೇವರ ಪೂಜಾರಿಯು ಭರಮದೇವರ ಕಟ್ಟೆಯ ಮೇಲೆ ನಿಂತು ಹತಾರ ಸೇವೆ ಆದ ನಂತರ ಭವಿಷ್ಯದ ಮಳೆ, ಬೆಳೆಗಳ ಬಗ್ಗೆ ಹೇಳಿಕೆ ನಡೆಯುವದು. ದಿ.೨೨ ರಂದು ಬಸವೇಶ್ವರನಿಗೆ ರುದ್ರಾಭಿಷೇಕ, ನಂತರ ಇಂದಿಗೆ ರಥೋತ್ಸವ ಪ್ರಾರಂಭಗೊಂಡು 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮದ ನಿಮಿತ್ಯ ನಮ್ಮೂರಿನ ಶಾಲೆಯಲ್ಲಿ ಕಲಿಸಿದ ಗುರುಗಳ ಕಲಿಸುತ್ತಿರುವ ಶಿಕ್ಷಕರ ಗುರುವಂದನಾ ಕಾರ್ಯಕ್ರಮ ಹಾಗೂ ಹಾಲಿ ಹಾಗೂ ಮಾಜಿ ಸೈನಿಕರಿಗೆ ಮತ್ತು ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ವಿವಿಧ ಶ್ರೀಗಳ ಆಶೀರ್ವಚನ ಕಾರ್ಯಕ್ರಮ ಜರುಗಲಿದೆ ನಂತರ ಲಘು ರಥೋತ್ಸವ ನಂತರ, ಮಹಾರಥೋತ್ಸವ ಜರುಗಲಿದೆ.
ರಾತ್ರಿ 10 ಗಂಟೆಗೆ ನಾಟಕ ಪ್ರದರ್ಶನ:
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಚಿಕ್ಕಲಗುಂಡಿ ಗ್ರಾಮದ ಅಂಜನಿಪುತ್ರ ನಾಟ್ಯ ಸಂಘ, (ವಿಠ್ಠಲ ಚಿಕ್ಕಲಗುಂಡಿ ) ಹಾಗೂ ರಾಮದುರ್ಗ ತಾಲೂಕಿನ ಚನ್ನಾಪುರ ಗ್ರಾಮದ ಕನಸುಗಾರ ಕವಿ ರಮೇಶ್ ಹೆಚ್ ಬಡಿಗೇರ ವೀರಚಿತ ಹಾಸ್ಯ ಭರಿತ ಸಾಮಾಜಿಕ ನಾಟಕ ತಾಯಿಯ ಋಣ ಮಣ್ಣಿನ ಗುಣ ಎಂಬ ಸಾಮಾಜಿಕ ಪ್ರದರ್ಶನ ಜರುಗಲಿದೆ ಎಂದು ಜಾತ್ರಾ ಸಮಿತಿಯವರು ತಿಳಿಸಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸುತ್ತಮುತ್ತಲಿನ ಸಕಲ-ಸದ್ಭಕ್ತರು ಪಾಲ್ಗೊಂಡು ಶ್ರೀ ಮಾರುತೇಶ್ವರ ಹಾಗೂ ಬಸವೇಶ್ವರನ ಕೃಪೆಗೆ ಪಾತ್ರರಾಗಬೇಕೆಂದು ಗ್ರಾಮಸ್ಥರ ಪರವಾಗಿ ಸ್ಥಳೀಯ ಸ್ವಾಮಿ ವಿವೇಕಾನಂದ ಯುವಕ ಮಂಡಳದ ಸದಸ್ಯ ಹಾಗೂ ಪತ್ರಕರ್ತ ಜಗದೀಶ ಹದ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ



















