ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನ ಮೆಟ್ರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿನ್ನಾಪುರ ಮತ್ತು ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋನಾಳು ಗ್ರಾಮಗಳಲ್ಲಿ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮತ್ತು ಕೆ.ಕೆ.ಆರ್.ಡಿ.ಬಿ ಯೋಜನೆಯ ಅನುದಾನದ 44.60.ಲಕ್ಷ ರೂಗಳ ವೆಚ್ಚದ ಶಾಲಾ ಕೊಠಡಿಗಳು ಮತ್ತು ಶೌಚಾಲಯ ನಿರ್ಮಾಣಕ್ಕೆ ಶಾಸಕ ಜೆ. ಎನ್. ಗಣೇಶ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಮೆಟ್ರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿನ್ನಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 23.90.ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಿರುವ 1 ನೂತನ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ಸಲ್ಲಿಸಿದರು.
ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋನಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 20.70.ಲಕ್ಷ ರೂಗಳ ವೆಚ್ಚದಲ್ಲಿ 1 ಶಾಲಾ ಕೊಠಡಿ ಮತ್ತು ಅತ್ಯಾಧುನಿಕ ಶೌಚಾಲಯ ನಿರ್ಮಾಣಕ್ಕೆ ಶಾಸಕ ಜೆ. ಎನ್. ಗಣೇಶ್ ಅಡಿಗಲ್ಲು ಪೂಜೆ ಸಲ್ಲಿಸಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕರು, ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಗತ್ಯವಿರುವ ಶಾಲಾ ಕೊಠಡಿಗಳನ್ನು ಸರ್ಕಾರದ ವಿವಿಧ ಇಲಾಖೆಗಳ ಅನುದಾನ ಮತ್ತು ಕೆ.ಕೆ.ಆರ್.ಡಿ.ಬಿ.ಆನುದಾನದಲ್ಲಿ ನಿರ್ಮಿಸಿಕೊಡಲಾಗುವುದು. ಜೊತೆಗೆ ಶಾಲೆಗಳಲ್ಲಿ ಅಗತ್ಯವಿರುವ ಶಿಕ್ಷಕರ ನೇಮಕಕ್ಕೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹತ್ತಿರ ಚರ್ಚಿಸಿದ್ದು, ಶೀಘ್ರವಾಗಿ ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ಶಿಕ್ಷಕರನ್ನು ಒದಗಿಸುವ ಪ್ರಯತ್ನಗಳನ್ನು ಮಾಡಲಾಗುವುದು ಎಂದ ಅವರು ಪಾಲಕರು ತಮ್ಮ ಮಕ್ಕಳ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದೇ ಉನ್ನತ ಶಿಕ್ಷಣ ಕೊಡಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯ ಕೋಟೆ ಷಣ್ಮುಖ, ಕಂಪ್ಲಿ ಪುರಸಭೆ ಸದಸ್ಯ ಸಿ. ಆರ್. ಹನುಮಂತ, ಗೋನಾಳು ಗ್ರಾಮದ ಎಸ್ ಡಿ ಎಂ ಸಿ ಅಧ್ಯಕ್ಷ ಸರ್ದಾರ್, ಮುಖಂಡರಾದ ಗಣೇಶ್, ನೇಣಕಿ ಗಿರೀಶ್, ಕುಮಾರ್, ಮೆಟ್ರಿ ದೇವಣ್ಣ, ಶರಣ, ಶಿಕ್ಷಕರಾದ ರವಿಕುಮಾರ್, ರಮೇಶ್, ಆಂಜಿನಿ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರು, ವಿದ್ಯಾರ್ಥಿಗಳು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















