ಉತ್ತರ ಕನ್ನಡ :ಸರ್ಕಾರದ ಆದೇಶವಿದ್ದರೂ ಕನ್ನಡ ನಾಮಫಲಕಗಳನ್ನು ಅಳವಡಿಸದಿರುವ ಅಂಗಡಿ ಮುಂಗಟ್ಟುಗಳ ಪರವಾನಗಿಯನ್ನು ರದ್ದುಪಡಿಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ರವರಿಗೆ ಕರುನಾಡ ವಿಜಯಸೇನೆಯ ಜಿಲ್ಲಾಧ್ಯಕ್ಷರಾದ ವಿನಾಯಕ ಆಚಾರಿ ರವರು ಸಂಬಂಧಪಟ್ಟ ಇಲಾಖೆಗೆ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ.
ನಗರಸಭೆ, ಪುರಸಭೆ ಪಟ್ಟಣ ಪಂಚಾಯತ್ ಹಾಗೂ ಇನ್ನಿತರೆ ಇಲಾಖೆಗಳಿಂದ ಪರವಾನಗಿ ಪಡೆದು ವ್ಯಾಪಾರ ವಹಿವಾಟು ನಡೆಸುತ್ತಿರುವವರು ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಬೇಕೆಂಬ ನಿಯಮವಿದ್ದರೂ ಪಾಲನೆ ಮಾಡುತ್ತಿಲ್ಲ. ಖಾಸಗಿ ಆಸ್ಪತ್ರೆ, ಶಾಲಾ-ಕಾಲೇಜು, ಸಂಘ ಸಂಸ್ಥೆಗಳು, ಎಂಟರ್ ಪ್ರೈಸಸ್ ಕಚೇರಿಗಳು ಕನ್ನಡ ನಾಮಫಲಕಗಳನ್ನು ಹಾಕಬೇಕೆಂದು ಹಲವಾರು ಬಾರಿ ಮನವಿ ಮಾಡಿದ್ದೇವೆ. ಸಂಬಂಧಪಟ್ಟ ಇಲಾಖೆಯವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೆ ಎಚ್ಚೆತ್ತುಕೊಂಡು ಕನ್ನಡ ನಾಮಫಲಕಗಳ ಅಳವಡಿಕೆಗೆ ಸೂಚಿಸಬೇಕು. ಇಲ್ಲವಾದಲ್ಲಿ ನವಂಬರ್ 1 ರಂದು ಕನ್ನಡ ರಾಜ್ಯೋತ್ಸವದಂದು ವಿನೂತನವಾಗಿ ಪ್ರತಿಭಟಿಸಲಾಗುವುದೆಂದು ಕರುನಾಡ ವಿಜಯಸೇನೆ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ವಿನಾಯಕ ಆಚಾರಿ ಎಚ್ಚರಿಸಿದ್ದಾರೆ .
- ಕರುನಾಡ ಕಂದ ಪತ್ರಿಕೆ



















