
ಕೊಪ್ಪಳ : ವಿದ್ಯಾರ್ಥಿಗಳು ಪಾಠ ಮತ್ತು ಕೌಶಲ್ಯಗಳ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳು ಹೊರ ಹೊಮ್ಮುವುದಕ್ಕೆ ಸಹಾಯವಾಗುತ್ತದೆ ಎಂದು ಕೊಪ್ಪಳದ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ತಿಳಿಸಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ, ಸಾಂಸ್ಕೃತಿಕ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಈ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅವರು ಮಾತನಾಡುತ್ತ ವಿದ್ಯಾರ್ಥಿಗಳು ಸಾಂಸ್ಕೃತಿಕ ಹವ್ಯಾಸವನ್ನು, ಸಂಸ್ಕೃತಿಯ ಸೌಜನ್ಯವನ್ನು ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ನಮ್ಮ ನಡೆ-ನುಡಿ ವ್ಯಕ್ತವಾಗುವುದೇ ಸಂಸ್ಕೃತಿ. ಪಂಪರಿಂದ ಕುವೆಂಪುವರೆಗೂ ಮಾನವ ಕುಲಂ ತಾನೊಂದೇ ವಲಂ ಎಂದು, ಕುವೆಂಪು ಅವರು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದ್ದಾರೆ. ಸಕಲ ಜಾತಿಗಳು ಕೂಡಿ ಬಾಳುವುದೇ ಸಂಸ್ಕೃತಿಯಾಗಿದೆ ಶಿಶುನಾಳು ಷರೀಫರು ಸೇರಿದಂತೆ ಎಲ್ಲಾ ತತ್ವಪದಕಾರರು ಜಾತಿ ಭೇದ-ಭಾವ ಮಾಡಬಾರದು ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳು ಕೊಪ್ಪಳದ ಸಿದ್ದಯ್ಯ ಪುರಾಣಿಕ ಅವರ ವಿಚಾರಗಳನ್ನು ತಿಳಿದುಕೊಳ್ಳಬೇಕು. ಭಾರತದಲ್ಲಿ ವಿವಿಧ ರೀತಿಯ ಉಡುಗೆ-ತೊಡುಗೆ, ಆಹಾರ, ಆಚರಣೆ ಪದ್ಧತಿಗಳು ಇವೆ. ನಮ್ಮ ದೇಶ ಬಹುತ್ವದ ದೇಶ ಎಂದು ತಿಳಿಸಿದರು.
ಕೊಪ್ಪಳದ ನಗರ ಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಮಾತನಾಡುತ್ತಾ ಭಾರತ ವಿವಿಧತೆಯಲ್ಲಿ ಏಕತೆಯಿರುವ ದೇಶ. ವಿದ್ಯಾರ್ಥಿಗಳು ತಂದೆ-ತಾಯಿಗಳ ಅಸೆಗಳನ್ನು ಈಡೇರಿಸಬೇಕು ಮಹಿಳೆಯರು ಚನ್ನಾಗಿ ಓದಬೇಕು. ಆಗ ಮಾತ್ರ ಮಹಿಳಾ ಸಬಲೀಕರಣ ಆಗುತ್ತದೆ. ಮಹಿಳೆಯರು ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ಜಾನಪದ ಗೀತೆಗಳು, ಸಮೂಹ ನೃತ್ಯ, ಮೋಜಿನ ಗೊಂಬೆ ಮತ್ತು ನಂದಿ ಧ್ವಜ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ಚಾನು ಪಾಷ ಕಿಲ್ಲೆದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ, ಬಿ. ಜಿ ಕರಿಗಾರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಕೊಪ್ಪಳದ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್, ಪ್ರಾಧ್ಯಾಪಕಿ ಡಾ. ಹುಲಿಗೆಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿವಿಧ ಅಕಾಡೆಮಿಗಳ ಸದಸ್ಯರು, ಡಾ. ಸಿದ್ದಯ್ಯ ಪುರಾಣಿಕ ಟ್ರಸ್ಟ್ ನ ಸದಸ್ಯರು, ಕಾಲೇಜಿನ ಎಲ್ಲ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಿ. ವಿ ಜಡಿ ನಿರೂಪಿಸಿದರು. ಕರ್ಣಕುಮಾರ ಸ್ವಾಗತಿಸಿದರು.
- ಕರುನಾಡ ಕಂದ ಪತ್ರಿಕೆ



















