
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಾಲಳ್ಳಿ ಗ್ರಾಮದ ಸರ್ಕಾರಿ ಶಾಲೆಯ ದುಸ್ಥಿತಿಯು ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ ದಿಂದ ಮಕ್ಕಳ ಭವಿಷ್ಯದ ಮೇಲೆ ಕರಿನೆರಳು ಬೀರುವಂತಿದೆ. ಶಾಲಾ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದ್ದು, ಜೀವಭಯದಲ್ಲೇ ಮಕ್ಕಳು ಶಿಕ್ಷಣ ಪಡೆಯುವಂತಾಗಿದೆ ಎಂಬುದು ವಿಷಾದನೀಯ ಸಂಗತಿಯಾಗಿದೆ. ಸರ್ಕಾರಿ ಶಾಲೆಗಳ ದುಸ್ಥಿತಿ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಹಾಲಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 209 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಶಾಲಾ ಕಟ್ಟಡಗಳು ದುಸ್ಥಿತಿಗೆ ತಲುಪಿದ್ದು, ಮಕ್ಕಳ ಸುರಕ್ಷತೆಗೆ ಧಕ್ಕೆಯುಂಟಾಗಿದೆ ಶಾಲಾ ಕೊಠಡಿಗಳು ಬಿರುಕು ಬಿಟ್ಟಿದ್ದು, ಕೆಲವೊಂದು ಕೊಠಡಿಗಳು ಕುಸಿದು ಬೀಳುವ ಹಂತಕ್ಕೆ ತಲುಪಿವೆ. ಈ ಪರಿಸ್ಥಿತಿಯಲ್ಲಿ ಮಕ್ಕಳು ಭಯದಿಂದಲೇ ಪಾಠ ಕೇಳುವಂತಾಗಿದೆ.
ಶಾಲೆಯಲ್ಲಿ ಒಟ್ಟು ಆರು ಕೊಠಡಿಗಳಿದ್ದು, ಅವುಗಳಲ್ಲಿ ಒಂದು ಕೊಠಡಿಯನ್ನು ಕಚೇರಿಗಾಗಿ ಮತ್ತು ಇನ್ನೊಂದನ್ನು ಕಂಪ್ಯೂಟರ್ ಕೊಠಡಿಯಾಗಿ ಬಳಸಲಾಗುತ್ತಿದೆ. ಉಳಿದ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಆದರೆ, ಒಂದು ಕೊಠಡಿಯು ಈಗಾಗಲೇ ನೆಲಸಮವಾಗಿದೆ.
ಶಾಲೆಯಲ್ಲಿ ಆಧುನಿಕ ಶೌಚಾಲಯಗಳಿದ್ದರೂ, ಅವುಗಳನ್ನು ಮಕ್ಕಳ ಬಳಕೆಗೆ ಇನ್ನೂ ತೆರೆಯಲಾಗಿಲ್ಲ. ಇದು ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಮಕ್ಕಳ ಸುರಕ್ಷತೆ ಮತ್ತು ಮೂಲಸೌಕರ್ಯಗಳ ನಿರ್ವಹಣೆಯಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಶಾಲಾ ದುರಸ್ತಿ ಕಾರ್ಯ ಕೈಗೊಳ್ಳಬೇಕು ಮತ್ತು ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಘಟನೆ ಶಿಕ್ಷಣ ಇಲಾಖೆಯ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ. ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ಸರಿಪಡಿಸಲು ಮತ್ತು ಮಕ್ಕಳ ಸುರಕ್ಷಿತ ಶಿಕ್ಷಣಕ್ಕೆ ಒತ್ತು ನೀಡಲು ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕಾಗಿದೆ.
ವರದಿ. ವಿಠ್ಠಲ ಖೋಕಾಟೆ




















