ಅಥಣಿ ಪಟ್ಟಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ್ ಸವದಿ ಅವರು, ತಮ್ಮ ರಾಜಕೀಯ ಪ್ರಭಾವದ ಕುರಿತು ಸ್ಪಷ್ಟ ಸಂದೇಶ ನೀಡಿದರು.
ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನ ತಮ್ಮ ಕೈ ತಪ್ಪಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,
“ನಾನು ಈಗಾಗಲೇ ಅಪೇಕ್ಸ್ ಬ್ಯಾಂಕ್ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದೇನೆ. ಈ ಬಾರಿ ನಿರ್ದೇಶಕನಾಗಬೇಕೆಂಬ ಅಪೇಕ್ಷೆಯೇ ನನಗಿರಲಿಲ್ಲ. ಹಾಗಾಗಿ ಅದು ಕೈ ತಪ್ಪಿದ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಇನ್ನೂ ರಾಜಕೀಯ ಕುರಿತು ಮಾತನಾಡಿದ ಶಾಸಕರು,
“ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಯಾರೂ ಶಾಶ್ವತ ಮಿತ್ರರೂ ಅಲ್ಲ. ನನಗೆ ಸಿಗಬೇಕಾದ ಅವಕಾಶಗಳನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ನನ್ನ ಪ್ರಭಾವವನ್ನು ಕುಗ್ಗಿಸುವ ಶಕ್ತಿ ಯಾರಿಗೂ ಇಲ್ಲ” ಎಂದು ಆತ್ಮವಿಶ್ವಾಸದ ಮಾತುಗಳನ್ನಾಡಿದರು.
ಈ ವೇಳೆ ಕೃಷ್ಣಾ ನದಿ ತೀರದ ನೆರೆ ಸಂತ್ರಸ್ತರ ಪುನರ್ವಸತಿ ಕುರಿತು ಮಾತನಾಡಿದ ಅವರು,
“ಕೃಷ್ಣಾ ನದಿ ತೀರದ ಸುಮಾರು 20 ಹಳ್ಳಿಗಳ ಜನರು ಸವಳು–ಜವಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈಗಾಗಲೇ ಏಳು ಗ್ರಾಮಗಳಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರ ಹಕ್ಕುಪತ್ರಗಳನ್ನು ವಿತರಿಸಲಾಗುವುದು. ಮುಂದಿನ ದಿನಗಳಲ್ಲಿ ಉಳಿದ ಹಳ್ಳಿಗಳ ಸ್ಥಳಾಂತರಕ್ಕಾಗಿ ಪುನರ್ವಸತಿ ಕೇಂದ್ರಗಳ ಸ್ಥಾಪನೆಗೆ ಸ್ಥಳ ಗುರುತಿಸಲಾಗುತ್ತಿದ್ದು, ಸರ್ಕಾರ ಈ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿದೆ” ಎಂದು ಹೇಳಿದರು.
ವರದಿ. ವಿಠ್ಠಲ ಖೋಕಾಟೆ




















