ಕಂಪ್ಲಿ: ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಭೋವಿ (ವಡ್ಡರ) ಸಮುದಾಯದ ಅಭಿವೃದ್ಧಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿ, ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಭೋವಿ ಗುರುಪೀಠದ ಇಮ್ಮುಡಿ ಸಿದ್ದರಾಮೇಶ್ವರ ಮಹಾಸ್ವಾಮಿ ಹೇಳಿದರು.
ಪಟ್ಟಣದ ಸಾಂಗಾತ್ರಯ ಸಂಸ್ಕೃತಪಾಠ ಶಾಲೆಯಲ್ಲಿ ಕಂಪ್ಲಿ-ಕುರುಗೋಡು ತಾಲೂಕು ಸಮಸ್ತ ಭೋವಿ (ವಡ್ಡರ) ಸಮಾಜದಿಂದ ಬುಧವಾರ ಹಮ್ಮಿಕೊಂಡಿದ್ದ ಜಯಂತ್ಯೋತ್ಸವ ಹಾಗೂ ಜನಜಾಗೃತಿ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿ, ಶಿವಯೋಗಿ ಸಿದ್ಧರಾಮೇಶ್ವರ ಅವರು ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಲು ಪ್ರಯತ್ನಿಸಿದ್ದರು. ಸಮಸ್ಯೆಗಳಿಗೆ ಹೆದರದೆ ಮುನ್ನುಗ್ಗಿ ಜನರ ಮನಸ್ಸಿನಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದರು. ಪಾಲಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದಾಗ ಮಾತ್ರ ಒಂದು ಸಮಾಜ ಬಲಿಷ್ಠವಾಗಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಗೆ ಸೌಲಭ್ಯಗಳು ಸಿಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕು. ಇಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಈ ಜಯಂತಿ ಆಚರಿಸುವುದಕ್ಕೆ ಸಾರ್ಥಕವಾಗುತ್ತದೆ ಎಂದರು.
ಶಾಸಕ ಜೆ.ಎನ್.ಗಣೇಶ್ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿ, ಭೋವಿ ಸಮಾಜದವರು ಶ್ರಮ ಜೀವಿಗಳಾಗಿದ್ದು, ಸಮಾಜ ಅಭಿವೃದ್ಧಿಯಾಗಲು ಶಿಕ್ಷಣ ಮುಖ್ಯವಾದ ಆಯುಧವಾಗಿದೆ. ಹಾಗಾಗಿ ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಉನ್ನತ ಶಿಕ್ಷಣ ಪಡೆಯಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಿ.ಟಿ.ರಾಜ, ವಿ.ಟಿ.ಕುಮಾರ, ಮಹೇಶ್ ಟೈಲ್ಸ್, ವಿಶ್ವನಾಥ, ವಿ.ಬಿ.ನಾಗರಾಜ, ಯಲ್ಲಪ್ಪ, ನಾಗೇಂದ್ರ, ರಂಗಪ್ಪ ಸೇರಿದಂತೆ ಮುಖಂಡರು, ಮಹಿಳೆಯರು ಭಾಗವಹಿಸಿದ್ದರು.
ಮೆರವಣಿಗೆ : ಇಲ್ಲಿನ ಕೋಟೆ ಪ್ರದೇಶದಲ್ಲಿ ಆರಂಭಗೊಂಡ ಸಿದ್ದರಾಮೇಶ್ವರರವರ ಭವ್ಯ ಮೆರವಣಿಗೆ ರಸ್ತೆಯುದ್ದಕ್ಕೂ ನಡೆಯಿತು. ನಡುವಲ ಮಸೀದಿ, ಅಂಬೇಡ್ಕರ್ ವೃತ್ತ, ಸಂತೆ ಮಾರುಕಟ್ಟೆ ಮೂಲಕ ಸಾಂಗಾತ್ರಯ ಸಂಸ್ಕೃತ ಪಾಠಶಾಲೆ ಬಳಿಯಲ್ಲಿ ಸಮಾವೇಶಗೊಂಡಿತು.
ಈ ಮೆರವಣಿಗೆಯಲ್ಲಿ ತಾಷಾರಾಂಡೋಲ್, ಡೊಳ್ಳು ಕುಣಿತ, ಮಹಿಳೆಯರ ಕುಂಭ, ಕಳಸ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು. ಶಾಸಕ ಗಣೇಶ ಇವರು ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















