ಚಿಟಗುಪ್ಪ : ಜಾತಿ, ವರ್ಗ, ವರ್ಣ ಭೇದ ಎನ್ನದೇ ಸಮಾಜದ ಸರ್ವರ ಒಳಿತಿಗಾಗಿ ಶ್ರಮಿಸಿದ ಸರ್ವಜ್ಞ ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ ಎಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ, ಸಾಹಿತಿ ಸಂಗಮೇಶ ಎನ್. ಜವಾದಿ ಹೇಳಿದರು.
ಪಟ್ಟಣದ ಕಲ್ಯಾಣ ಕಾಯಕ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಸಂತ ಕವಿ ಸರ್ವಜ್ಞ ಅವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
‘ ಸಮಾಜದಲ್ಲಿ ಬೇರೂರಿರುವ ಜಾತಿ-ಧರ್ಮ, ಮೇಲು-ಕೀಳು, ಬಡವ-ಶ್ರೀಮಂತ ಎಂಬ ತಾರತಮ್ಯ ಹೋಗಲಾಡಿಸಲು ಸರ್ವಜ್ಞ ಸೇರಿದಂತೆ ಅನೇಕ ಮಹಾತ್ಮರು ಶ್ರಮಿಸಿದ್ದಾರೆ. ಅವರ ಮಾನವೀಯ ಮೌಲ್ಯಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಸರ್ವಜ್ಞ ಕವಿಯ ತ್ರಿಪದಿಗಳು ಆದರ್ಶವಾಗಿವೆ. ಸರ್ವಜ್ಞ ಲಕ್ಷಾಂತರ ತ್ರಿಪದಿಗಳು ರಚಿಸಿ ಸಮಾಜದ ಎಲ್ಲಾ ಕ್ಷೇತ್ರಗಳ ಅಂಕು-ಡೊಂಕುಗಳನ್ನು ತಿದ್ದಿದರು. ಸಮಾಜದಲ್ಲಿನ ಮೌಢ್ಯ, ಕಂದಾಚಾರ ಸೇರಿದಂತೆ ಅನಿಷ್ಟ ಪದ್ಧತಿಗಳನ್ನು ಸರ್ವಜ್ಞ ಕಠೋರವಾಗಿ ಟೀಕಿಸಿದರು. ಸ್ತ್ರೀ ಸಮಾನತೆಯ ಚಿಂತನೆಗಳನ್ನು ತ್ರಿಪದಿಗಳಲ್ಲಿ ಕಾಣಬಹುದು. ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ಸರ್ವಜ್ಞರ ತ್ರಿಪದಿಗಳ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮನೋಹರ ಮೇದಾ, ಭೀಮಶೆಟ್ಟಿ ವಡ್ಡನಕೇರಾ, ಎನ್ ಎಸ್ ಮಲ್ಲಶೆಟ್ಟಿ, ಮನೋಹರ್ ಜಕ್ಕಾ, ಗುರುನಾಥ ಮಾಹಾಜನ್, ಶೌರ್ಯ ಜವಾದಿ, ಬಸವರಾಜ ಪಂಗರಗಿ, ಸಿದ್ದು ಪಡಶೆಟ್ಟಿ, ರಾಕೇಶ ಗುಡ್ಡಾ, ಸೂರ್ಯಕಿರಣ ಗುಡ್ಡಾ, ವೀರ ಮಹಾಜನ, ಶ್ರಾವ್ಯ ಜವಾದಿ, ಚನ್ನವೀರ ಲಾತೂರೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
- ಕರುನಾಡ ಕಂದ ಪತ್ರಿಕೆ



















