ಬಳ್ಳಾರಿ / ಕಂಪ್ಲಿ : ವಿವಿಧ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯದೊಂದಿಗೆ ಮೂಲಭೂತ ಸೌಲಭ್ಯಗಳನ್ನು ಜನತೆಗೆ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ಹಂಪಾದೇವನಹಳ್ಳಿ ಗ್ರಾ. ಪಂ. ಯ ಜವುಕು ಬಳಿಯ ಅಂಜಿನಾಪುರ ಗ್ರಾಮದಲ್ಲಿ 2025-26ನೇ ಸಾಲಿನ 4059 ಸಿಎಂಡಿಕ್ಯೂ ಯೋಜನೆಯಡಿ ಸುಮಾರು 150 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಅಂಜಿನಾಪುರದಿಂದ ಮೆಟ್ರಿ ಮುಖ್ಯರಸ್ತೆವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಗುತ್ತಿಗೆದಾರರು ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿ ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಈಗಾಗಲೇ ಮುಕ್ಕಾಲು ಭಾಗದಷ್ಟು ಗ್ರಾಮೀಣ ಭಾಗದಲ್ಲಿ ರಸ್ತೆಗಳನ್ನು ಸಾಕಷ್ಟು ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗಿದೆ. 15-20 ವರ್ಷಗಳ ಕಾಲ ರಸ್ತೆಗಳು ಅಭಿವೃದ್ಧಿಯಾಗದೇ ಜನತೆಗೆ ಸುಗಮ ಸಂಚಾರಕ್ಕೆ ಸಂಕಷ್ಟ ಎದುರಾಗಿತ್ತು. ಆದರೆ, ಕ್ಷೇತ್ರದ ಜನರು ನಮ್ಮನ್ನು ಆಯ್ಕೆ ಮಾಡಿದ ದಿನದಿಂದಲೂ ರಸ್ತೆ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಮೂಲಕ ಮೂಲಸೌರ್ಯಗಳನ್ನು ಒದಗಿಸಲಾಗಿದೆ. ಸುಗ್ಗೇನಹಳ್ಳಿ ಗ್ರಾಪಂಯ ಹೊನ್ನಳ್ಳಿ ಗ್ರಾಮದ ಕಮಾನ್ಯಿಂದ ದ್ಯಾವಮ್ಮ ಗುಡಿವರೆಗಿನ ರಸ್ತೆ ಅಭಿವೃದ್ಧಿಗೆ ಜನರು ಸಹಕರಿಸಬೇಕು. ರಸ್ತೆಯ ಅಕ್ಕಪಕ್ಕದಲ್ಲಿ ರಸ್ತೆ ಅಗಲೀಕರಣದೊಂದಿಗೆ ಅಭಿವೃದ್ಧಿಗೊಳಿಸಲು ಪಿಡಿಒ ಶಶಿಕಾಂತ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ನಂತರ ಹೊನ್ನಳ್ಳಿ ಗ್ರಾಮದಲ್ಲಿ ಸುಮಾರು 300 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಗಣೇಶ ಭೂಮಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















