ಬೆಳಗಾವಿ: ಚಿಕ್ಕೋಡಿ ಕ್ಷೇತ್ರದ ಗೋಟೂರು ರಾಜ್ಯ ರಸ್ತೆಯ ದುಸ್ಥಿತಿಯಿಂದ ಸಂಕಷ್ಟ ಅನುಭವಿಸುತ್ತಿದ್ದ ಸಾರ್ವಜನಿಕರಿಗೆ ಕೊನೆಗೂ ನೆಮ್ಮದಿ ಸಿಕ್ಕಿದೆ. ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ತ್ವರಿತ ಕ್ರಮ ಕೈಗೊಂಡ ಪರಿಣಾಮ, ಕೆಲವೇ ದಿನಗಳಲ್ಲಿ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದ್ದು, ಅಭಿವೃದ್ಧಿಯತ್ತ ಮಹತ್ವದ ಹೆಜ್ಜೆಯಾಗಿದೆ.
ಕಳೆದ ಕೆಲವು ತಿಂಗಳಿನಿಂದ ಗೋಟೂರು ರಸ್ತೆಯಲ್ಲಿ ಉಂಟಾಗಿದ್ದ ಬೃಹತ್ ಗುಂಡಿಗಳು ಹಾಗೂ ಹದಗೆಟ್ಟ ಮೇಲ್ಮೈ ಕಾರಣದಿಂದಾಗಿ ವಾಹನ ಸವಾರರು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದರು. ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟು, ಅಪಘಾತಗಳ ಭೀತಿ ಹೆಚ್ಚಾಗಿತ್ತು. ಈ ಹಿನ್ನೆಲೆ ಸ್ಥಳೀಯರು ಹಾಗೂ ಪ್ರಯಾಣಿಕರು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರು.
ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪವಾದಾಗ, ಸಂಸದೆ ಅವರು ತಕ್ಷಣ ಸ್ಪಂದಿಸಿ 3-4 ದಿನಗಳೊಳಗೆ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದ್ದರು. ತಮ್ಮ ಮಾತಿನಂತೆ, ಸಂಬಂಧಿತ ಲೋಕೋಪಯೋಗಿ ಇಲಾಖೆ (PWD) ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ರಸ್ತೆ ದುರಸ್ತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಇದರ ಫಲವಾಗಿ, ಅತ್ಯಂತ ವೇಗವಾಗಿ ಕಾಮಗಾರಿ ಪ್ರಾರಂಭಗೊಂಡಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಕಾಮಗಾರಿ, ಗುಣಮಟ್ಟದ ದೃಷ್ಟಿಯಿಂದ ಯಾವುದೇ ರಾಜಿ ಮಾಡಿಕೊಳ್ಳದಂತೆ ವಿಶೇಷ ಸೂಚನೆ ನೀಡಲಾಗಿದೆ. ರಸ್ತೆಯಲ್ಲಿನ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚುವುದು, ಮೇಲ್ಮೈಯನ್ನು ಸಮತಟ್ಟಾಗಿಸುವುದು ಹಾಗೂ ಭವಿಷ್ಯದಲ್ಲಿ ಸಮಸ್ಯೆ ಮರುಕಳಿಸದಂತೆ ಶಾಶ್ವತ ಪರಿಹಾರ ಒದಗಿಸುವ ದಿಶೆಯಲ್ಲಿ ಕಾರ್ಯ ನಡೆಯುತ್ತಿದೆ.
ಅದೇ ವೇಳೆ, ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಸ್ತೆ ಸುಧಾರಣೆಯಿಂದ ಸ್ಥಳೀಯ ಗ್ರಾಮಗಳ ಸಂಪರ್ಕ ಸುಗಮವಾಗುವ ಜೊತೆಗೆ, ವ್ಯಾಪಾರ ಹಾಗೂ ಸಾರಿಗೆ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಸಂಸದೆ ಅವರ ಈ ತ್ವರಿತ ಮತ್ತು ಜನಪರ ಕ್ರಮಕ್ಕೆ ಗೋಟೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದು, ಸಮಸ್ಯೆಗೆ ಸ್ಪಂದಿಸುವ ನಾಯಕತ್ವದ ಉದಾಹರಣೆಯಾಗಿ ಇದನ್ನು ಕೊಂಡಾಡುತ್ತಿದ್ದಾರೆ.
ವರದಿ ವಿಠ್ಠಲ ಖೋಕಾಟೆ




















