ನಾಲ್ಕು ದಿನಗಳಿಂದ ಹನಿ ನೀರಿಗೂ ಪರದಾಟ; ನಿಂಬಳಗೇರೆ ಗ್ರಾಮ ಪಂಚಾಯತಿ ವಿರುದ್ಧ ಸಾರ್ವಜನಿಕರ ಆಕ್ರೋಶ.
ಕೊಟ್ಟೂರು: (ವಿಜಯನಗರ) ನಿಂಬಳಗೇರೆ ಗ್ರಾಮದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಯರಮ್ಮನಹಳ್ಳಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಕುಡಿಯುವ ನೀರಿನ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಹನಿ ನೀರಿಗೂ ಪರದಾಡುವಂತಾಗಿದೆ.
ಗ್ರಾಮದಲ್ಲಿ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ ಮಾಡದ ಕಾರಣ,
ಸಾರ್ವಜನಿಕರು ಅನಿವಾರ್ಯವಾಗಿ ಸ್ಥಳೀಯರಾದ ಸಿ. ಪಿ. ಗಂಗಾಧರ ಅವರ ಮನೆ ಹತ್ತಿರವಿರುವ ಕೃಷಿ ಉದ್ದೇಶದ ಬೋರ್ವೆಲ್ ಮೊರೆ ಹೋಗಿದ್ದಾರೆ. ಕೃಷಿ ಬೋರ್ವೆಲ್ನಿಂದಲೇ ಕೊಡಗಳಲ್ಲಿ ನೀರು ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಗ್ರಾಮದ ಸದ್ಯದ ದುಸ್ಥಿತಿಗೆ ಕೈಗನ್ನಡಿಯಾಗಿದೆ.
”ಕಳೆದ ನಾಲ್ಕು ದಿನಗಳಿಂದ ಪಂಚಾಯತಿ ಕಡೆಯಿಂದ ಯಾವುದೇ ನೀರಿನ ವ್ಯವಸ್ಥೆ ಮಾಡಿಲ್ಲ. ಅಧಿಕಾರಿಗಳಿಗೆ ಕೇಳಿದರೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಸಿ.ಪಿ. ಗಂಗಾಧರ ಅವರು ತಮ್ಮ ತೋಟದ ಬೋರ್ವೆಲ್ ನೀರು ಕೊಡುತ್ತಿರುವುದರಿಂದ ಕುಡಿಯಲು ನೀರು ಸಿಗುತ್ತಿದೆ. ಇಲ್ಲದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿತ್ತು” ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಬೇಸಿಗೆ ಮುಗಿದರೂ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆಹರಿದಿಲ್ಲದಿರುವುದು ಪಂಚಾಯತಿಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣವೇ ಎಚ್ಚೆತ್ತುಕೊಂಡು ಯರಮ್ಮನಹಳ್ಳಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ತೀವ್ರವಾಗಿ ಒತ್ತಾಯಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















