ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ವಿಶೇಷ ಆದ್ಯತೆ: ಬಸವನಗೌಡ ದದ್ದಲ್
ಮಾನ್ವಿ: ತಾಲೂಕಿನ ರಾಜಲಬಂಡ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೆ.ಕೆ.ಆರ್.ಡಿ.ಬಿ. ಮೈಕ್ರೋ ಯೋಜನೆಯಡಿ ಅಂದಾಜು ₹40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಮೂರು ನೂತನ ಶಾಲಾ ಕೊಠಡಿಗಳನ್ನು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ತಿಳಿಸಿದರು.
ರಾಜಲಬಂಡ ಗ್ರಾಮದ ಶಾಲೆಗೆ ಬೇಡಿಕೆಯಂತೆ ಮೂರು ನೂತನ ಕೊಠಡಿಗಳನ್ನು ನಿರ್ಮಿಸಿ ನೀಡಲಾಗಿದೆ. ಶಾಲೆಗೆ ಅಗತ್ಯವಿರುವ ಎಲ್ಲ ಮೂಲಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ಶಿಕ್ಷಕರ ಕೊರತೆಯನ್ನು ನಿವಾರಿಸಲು ಐದು ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ ಎಂದು ಹೇಳಿದರು. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಾಲಾ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳು ಈ ಸಾಲಿನಲ್ಲಿ ಉಚಿತ ಬೈಸಿಕಲ್ ವಿತರಣೆ ಮಾಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರು ಆದ್ಯಪ್ಪ, ತಾಲೂಕು ಪಂಚಾಯಿತಿ ಇಒ ಖಾಲಿದ್ ಅಹಮ್ಮದ್, ಗ್ರಾಮ ಪಂಚಾಯಿತಿ ಪಿಡಿಒಗಳಾದ ಚೌಡಯ್ಯ ಹಾಗೂ ಅಕ್ತರ್ ಪಾಷಾ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಡಿ., ಜೆಸ್ಕಾಂ ಎಇಇ ವೈಜನಾಥಸ್ವಾಮಿ, ಗ್ರಾಮದ ಮುಖಂಡರಾದ ವಿಶ್ವನಾಥರೆಡ್ಡಿ, ಹುಲುಗಯ್ಯ ಸಾಹುಕಾರ, ನಾಗೇಂದ್ರಪ್ಪ, ತಿಕ್ಕಯ್ಯಸ್ವಾಮಿ, ಮಲ್ಲಿಕಾರ್ಜುನ ಗೌಡ, ಶಿವಪ್ಪ ನಾಯಕ, ಮೌನೇಶ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- ಕರುನಾಡ ಕಂದ ಸುದ್ದಿ



















