ಬಳ್ಳಾರಿ / ಕಂಪ್ಲಿ : ತಾಲ್ಲೂಕಿನಲ್ಲಿ ಈಗಾಗಲೇ ಆರಂಭವಾಗಿರುವ ಮತದರಾರ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನ ಭರದಿಂದ ಸಾಗಿದ್ದು, ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಗಣ್ಯರು, ರಾಜಕೀಯ ಪ್ರತಿನಿಧಿಗಳು ಹಾಗೂ ವಿಶೇಷವಾಗಿ ಪ್ರಶಸ್ತಿ ಪುರಸ್ಕೃತ ಕಲಾವಿದರಿಗೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಯ ಎನ್ಯುಮರೇಷನ್ ಅರ್ಜಿಗಳನ್ನು ವಿತರಿಸಿ ಮತದಾರರ ಪರಿಷ್ಕರಣೆ ಜಾಗೃತಿ ಮೂಡಿಸಿದರು.
ತಾಲ್ಲೂಕಿನ ದೇವಲಾಪುರ ಗ್ರಾ. ಪಂ. ವ್ಯಾಪ್ತಿಯ ಸೋಮಲಾಪುರ ಗ್ರಾಮದಲ್ಲಿ ವಾಸವಿರುವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬುರ್ರಕಥಾ ಕಲಾವಿದೆ ಅಶ್ವಪೆದ್ದ ರಾಮಕ್ಕ ಅವರ ಮನೆಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸಿಬ್ಬಂದಿಗಳು ಭೇಟಿ ನೀಡಿ ಕಲಾವಿದೆಯನ್ನು ಆತ್ಮೀಯವಾಗಿ ಸನ್ಮಾನಿಸಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನ ಕುರಿತು ಮಾಹಿತಿ ನೀಡಿ ತಮ್ಮ ಗ್ರಾಮದಲ್ಲಿ ಮತದಾರರ ಪರಿಷ್ಕರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಮನವಿ ಮಾಡಿದರು.
ದೇವಲಾಪುರ ಗ್ರಾ.ಪಂ.ಪಿಡಿಒ ಮಲ್ಲಿಕಾರ್ಜುನ ಮಾತನಾಡಿ ಮತದಾರರು ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಈಗಾಗಲೇ ತಾವು ಮತದಾನ ಮಾಡಿದ ದಾಖಲೆಗಳನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು. ಒಂದು ತಿಂಗಳ ಕಾಲ ಈ ಅಭಿಯಾನ ನಡೆಯಲಿದ್ದು, ನಂತರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಅದರಲ್ಲಿ ತಪ್ಪುಗಳಿದ್ದರೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಸಿಬ್ಬಂದಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















