
ಮಂಡ್ಯ: ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಇಟ್ಟಮಡು ಗ್ರಾಮದಲ್ಲಿ ಸಾಮಾಜಿಕ ಹೊಣೆಗಾರಿಕೆ (CSR) ಯೋಜನೆಯಡಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ನಿರ್ಮಾಣವಾಗಲಿರುವ ನೂತನ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡದ ಗುದ್ದಲಿ ಪೂಜೆಯ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆಯನ್ನು ಸಂಸದ ಡಾ ಸಿ ಎನ್ ಮಂಜುನಾಥ್ ಅವರು ನಡೆಸಿ ಕೊಟ್ಟರು.
ಇಟ್ಟಮಡು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ಹಲವು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿದ್ದು, ವಿದ್ಯಾರ್ಥಿಗಳು ಸೂಕ್ತ ಮೂಲಸೌಕರ್ಯಗಳ ಕೊರತೆಯ ನಡುವೆ ವಿದ್ಯಾಭ್ಯಾಸ ಮಾಡುತ್ತಿರುವ ವಿಚಾರ ಗಮನಕ್ಕೆ ಬಂದಿದ್ದು ಗ್ರಾಮಸ್ಥರ ಮನವಿಗೆ ಸ್ಪಂದಿಸಿ, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯೊಂದಿಗೆ ಸಮನ್ವಯ ಸಾಧಿಸಿ, ಸಂಸ್ಥೆಯ CSR ಯೋಜನೆಯಡಿ ಈ ನೂತನ ಶಾಲಾ ಕಟ್ಟಡವನ್ನು ಮಂಜೂರು ಮಾಡಿಸಲು ಸಾಧ್ಯವಾದುದು ನನಗೆ ಸಂತೋಷ ತಂದಿದೆ ಎಂದು ಸಂಸದ ಡಾ ಸಿ ಎನ್ ಮಂಜುನಾಥ್ ಅವರು ವಿವರಿಸಿದರು.
ಸುತ್ತಮುತ್ತಲಿನ ಐದು ಗ್ರಾಮಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಈ ಶಾಲೆಗೆ ನಾಲ್ಕು ಹೆಚ್ಚುವರಿ ತರಗತಿ ಕೊಠಡಿಗಳು, ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ನೈರ್ಮಲ್ಯ ಸೌಲಭ್ಯಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ನಿರ್ಮಾಣವಾಗಲಿವೆ. ಇದರಿಂದ ಮಕ್ಕಳಿಗೆ ಸುರಕ್ಷಿತ, ಸ್ವಚ್ಛ ಹಾಗೂ ಗುಣಮಟ್ಟದ ಶೈಕ್ಷಣಿಕ ವಾತಾವರಣ ದೊರೆಯಲಿದ್ದು, ಅವರ ಕಲಿಕೆಗೆ ಇನ್ನಷ್ಟು ಉತ್ತೇಜನ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರಲ್ಲದೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯೇ ಸಮಾಜದ ಸರ್ವಾಂಗೀಣ ಪ್ರಗತಿಗೆ ಭದ್ರ ಅಡಿಪಾಯ. ನಮ್ಮ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳ ಜೊತೆಗೆ CSR ಸಹಭಾಗಿತ್ವವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಸಂಕಲ್ಪ ಹೊಂದಿದ್ದೇನೆ ಎಂದು ಸಂಸದ ಡಾ. ಸಿ ಎನ್ ಮಂಜುನಾಥ್ ಅವರು ಘೋಷಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಿ. ಎಂ. ಲಿಂಗಪ್ಪ, ಬಿಡದಿ ಪುರಸಭೆ ಅಧ್ಯಕ್ಷೆ ಭಾನುಮತಿ, ಬಿಜೆಪಿ ಮುಖಂಡ ಪ್ರಸಾದ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಣ್ಣ, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷ ಶ್ರೀ ರಮೇಶ್ ರಾವ್, ಪ್ರಧಾನ ವ್ಯವಸ್ಥಾಪಕ ಶ್ರೀ ಕಿರಣ್, ವ್ಯವಸ್ಥಾಪಕ ಶ್ರೀ ಪ್ರಶಾಂತ್, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ




















