ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿ ಜೀವನ ಭವಿಷ್ಯ ರೂಪಿಸಿಕೊಳ್ಳುವ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ಮಾದಕ ವಸ್ತು ಸೇರಿದಂತೆ ಆರೋಗ್ಯಕ್ಕೆ ಮಾರಕವಾಗುವಂತಹ ಯಾವುದೇ ಚಟಗಳ ಆಕರ್ಷಣೆಗೆ ಒಳಗಾಗದೆ ದೂರವಿರಬೇಕು ಎಂದು ಎಎಸ್ಐ ಬಸವರಾಜ ತಿಳಿಸಿದರು.
ಶ್ರೀ ಸ್ವಾಮಿ ವಿವೇಕಾನಂದ ಶಾಲೆ ಕೋಟೆ ಕಂಪ್ಲಿ ಹಾಗೂ ಕಂಪ್ಲಿ ಪೊಲೀಸ್ ಠಾಣೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ಸಪ್ತಾಹ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾದಕ ವಸ್ತು ಸೇವನೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಉಂಟಾಗಿ ವ್ಯಸನಿಗಳು ಸಾವಿಗೆ ಸಮೀಪ ಆಗುತ್ತಾರೆ. ಹೀಗಾಗಿ ಇಂದಿನ ಯುವಸಮೂಹ ಉತ್ತಮ ಅಭ್ಯಾಸಗಳ ಕಡೆಗೆ ಗಮನ ಕೊಡಬೇಕು. ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಲು ಪ್ರಯತ್ನಿಸಬೇಕು ಎಂದರು.
ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವೆನೆಯಿಂದ ಆಗುವ ದುಷ್ಪರಿಣಾಮ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಎಲ್ಲಾದರೂ ಮಾದಕ ವಸ್ತುಗಳ ಮಾರಾಟ ಮತ್ತು ಅಕ್ರಮ ಸಾಗಾಟದಂತಹ ಪ್ರಕರಣ ಕಂಡು ಬಂದರೆ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಮಾದಕ ವಸ್ತುಗಳನ್ನು ಬಳಸುವುದಿಲ್ಲ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಮುಖ್ಯಗುರು ಜಿಲಾನಸಾಬ್ ಬಡಿಗೇರ್ , ಪೊಲೀಸ್ ಸಿಬ್ಬಂದಿ, ಶಿಕ್ಷಕರಾದ ಕಂಬತ್ ಶ್ವೇತಾ, ಕೊಲ್ಕರ್ ಜಯಶ್ರೀ, ವರ್ಷಾ ಮಂಜುಮದಾರ್, ಗೌಸಿಯಾ, ಜೆ. ಅಕ್ಷತಾ, ಡಿ. ಉಮಾದೇವಿ, ಮಠದ ಸುನೀತಾ, ಕೊಲ್ಕರ್ ಉಮಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















