ಸಿಂಧನೂರು : ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಕಳಪೆ ಆಹಾರ ಸೇವನೆಯಿಂದ ಅಸ್ವಸ್ಥ.
ಸಿಂಧನೂರು ನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಕಳಪೆ ಹಾಗೂ ಗುಣಮಟ್ಟವಿಲ್ಲದ ಆಹಾರ ಸೇವಿಸಿದ ಪರಿಣಾಮ ಅಸ್ವಸ್ಥಗೊಂಡಿರುವ ಘಟನೆ ಅತ್ಯಂತ ಆತಂಕಕಾರಿ ಮತ್ತು ಖಂಡನೀಯವಾಗಿದೆ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ, ಸುರಕ್ಷತೆ ಹಾಗೂ ಗುಣಮಟ್ಟದ ಆಹಾರ ಒದಗಿಸುವ ಹೊಣೆಗಾರಿಕೆ ವಾರ್ಡನ್ ಮತ್ತು ಸಂಬಂಧಿತ ಅಧಿಕಾರಿಗಳ ಮೇಲಿದೆ. ಈ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿರುವುದು ಗಂಭೀರ ಲೋಪವಾಗಿದೆ.
ಕಳಪೆ ಆಹಾರ ಸೇವನೆಯಿಂದ ಹಲವು ವಿದ್ಯಾರ್ಥಿಗಳು ವಾಂತಿ, ಹೊಟ್ಟೆನೋವು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲಿಸಿರುವುದು ಅತ್ಯಂತ ವಿಷಾದನೀಯ. ಇದು ವಿದ್ಯಾರ್ಥಿಗಳ ಜೀವದೊಂದಿಗೆ ಚೆಲ್ಲಾಟ ನಡೆಸಿದಂತಾಗಿದೆ.
ವಸತಿ ನಿಲಯದ ವಾರ್ಡನ್ ಅವರನ್ನು ಕೂಡಲೇ ಅಮಾನತುಗೊಳಿಸಿ ಇಲಾಖಾ ತನಿಖೆ ನಡೆಸಬೇಕು.
ಆಹಾರ ಪೂರೈಕೆದಾರರು ಹಾಗೂ ಆಹಾರ ಹೊಣೆಗಾರಿಕೆ ಜವಾಬ್ದಾರಿ ಹೊತ್ತಿರುವ ವಾರ್ಡನ್ ಮತ್ತುನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು.
ಆಹಾರದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ವೈಜ್ಞಾನಿಕ ಪರೀಕ್ಷೆ ನಡೆಸಿ ವರದಿಯನ್ನು ಸಾರ್ವಜನಿಕಗೊಳಿಸಬೇಕು.
ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಚಿಕಿತ್ಸೆ ಒದಗಿಸಿ, ಅವರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಬೇಕು.
ರಾಜ್ಯದ ಎಲ್ಲಾ ಮೊರಾರ್ಜಿ ದೇಸಾಯಿ ಹಾಗೂ ಇತರೆ ವಸತಿ ನಿಲಯಗಳಲ್ಲಿ ಆಹಾರದ ಗುಣಮಟ್ಟದ ಕುರಿತು ವಿಶೇಷ ತಪಾಸಣೆ ನಡೆಸಬೇಕು.
ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣಾ ವ್ಯವಸ್ಥೆಯನ್ನು ಜಾರಿಗೆ ತರಬೇಕು.
ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ಜನಸೇನೆ ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಕರ್ನಾಟಕ ಜನಸೇನೆ ಸಂಘಟನೆಯ ರಾಜ್ಯಾಧ್ಯಕ್ಷರು ರಮೇಶ್ ಕಾಳಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಸುದ್ದಿ




















