
ಕೊರಟಗೆರೆ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜದ ಸಹಕಾರ ಅಗತ್ಯ: ಸದಾನಂದ
ಕೊರಟಗೆರೆ, ಆ.14: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣ ಮಕ್ಕಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸುತ್ತದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು, ಉದ್ಯಮಿಗಳು ಹಾಗೂ ಸಮಾಜ ಸೇವಕರು ಕೈಜೋಡಿಸಬೇಕು ಎಂದು ಸಮಾಜ ಸೇವಕ ಸದಾನಂದ ಹೇಳಿದರು.
ಕೊರಟಗೆರೆ ಪಟ್ಟಣದ ಗಿರಿನಗರ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸರ್ಕಾರಿ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಸುಮಾರು ₹35 ಸಾವಿರ ವೆಚ್ಚದಲ್ಲಿ ಟ್ರ್ಯಾಕ್ಸೂಟ್ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಹಲವು ಕಾರಣಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ವಿಷಾದನೀಯ. ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಶಾಲೆಯ ಅಭಿವೃದ್ಧಿಗಾಗಿ ₹1 ಲಕ್ಷ ದೇಣಿಗೆ ನೀಡುವುದಾಗಿ ಸದಾನಂದ ಘೋಷಿಸಿದರು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸ್ವೆಟರ್ಗಳನ್ನು ಸಹ ವಿತರಿಸುವುದಾಗಿ ಭರವಸೆ ನೀಡಿದರು.
ಕ್ರೀಡಾಂಗಣ ಅಭಿವೃದ್ಧಿಗೆ ಒತ್ತಾಯ :
ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ಪಿಎಂಶ್ರೀ ಶಾಲೆಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡಬೇಕು. ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಗೆ ಸುಸಜ್ಜಿತ ಕ್ರೀಡಾಂಗಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
ಸಮಾಜ ಸೇವಕ ಸದಾನಂದ ಅವರ ನೇತೃತ್ವದಲ್ಲಿ ಹಲವು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗಿದ್ದು, ಇದೀಗ ಗಿರಿನಗರ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ಸೂಟ್ ವಿತರಿಸಿರುವುದು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗಲಿವೆ ಎಂದು ಅವರು ಹೇಳಿದರು.
ದಾನಿಗಳ ನೆರವಿನಿಂದ ಅಭಿವೃದ್ಧಿ :
ಶಾಲೆಯ ಮುಖ್ಯ ಶಿಕ್ಷಕ ಶಿವಶಂಕರಯ್ಯ ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಶಾಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ಕ್ರೀಡಾಂಗಣದ ಅಗತ್ಯವಿದೆ. ಸರ್ಕಾರದಿಂದ ನಿರೀಕ್ಷಿತ ಅನುದಾನ ದೊರೆಯದ ಹಿನ್ನೆಲೆಯಲ್ಲಿ ವೈಯಕ್ತಿಕ ಹಣ ಹಾಗೂ ದಾನಿಗಳ ಸಹಕಾರದಿಂದ ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ವರದಿ. ಪ್ರಸನ್ನ ಕುಮಾರ್. ಎಸ್. ಕೊರಟಗೆರೆ




















