ದಾವಣಗೆರೆ: ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯ ಸಹಾಯಕ ಸಾಧನಗಳನ್ನು ಒದಗಿಸುವ ಮೂಲಕ ಅವರ ದೈನಂದಿನ ಜೀವನವನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊನ್ನಾಳಿಯ ಶ್ರೀ ತರಳಬಾಳು ಸಮುದಾಯ ಭವನದಲ್ಲಿ ಅಗತ್ಯ ಸಾಧನ ಸಲಕರಣೆಗಳನ್ನು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ವಿತರಣೆ ಮಾಡಿ ವಿಕಲಚೇತನರ ಬಗೆಗೆ ತಮ್ಮ ಅಭಿವ್ಯಕ್ತಿಗಳನ್ನು ಪ್ರತಿಪಾದಿಸಿದರು.
ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧೀನದಲ್ಲಿರುವ ಆರ್ಟಿಫಿಷಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ALIMCO) ಮೂಲಕ ಪ್ರಧಾನಮಂತ್ರಿ ದಿವ್ಯಾಶಾ–ವಯೋಶ್ರೀ ಕೇಂದ್ರದಡಿ ದಿವ್ಯಾಂಗರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯವಿರುವ ವಿವಿಧ ಸಹಾಯಕ ಸಾಧನಗಳು ಮತ್ತು ಸೌಲಭ್ಯಗಳ ಕುರಿತು ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು.
ದಿವ್ಯಾಂಗರ ಸ್ವಾವಲಂಬನೆ, ಹಿರಿಯ ನಾಗರಿಕರ ಸುರಕ್ಷತೆ ಹಾಗೂ ಗೌರವಯುತ ಜೀವನಕ್ಕೆ ಅಗತ್ಯ ನೆರವು ಮತ್ತು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಅತ್ಯಂತ ಮಹತ್ವದ್ದಾಗಿದೆ. ಸರ್ಕಾರದ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ನಿರಂತರವಾಗಿ ಕಾರ್ಯನಿರ್ವಹಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಈ ಸಂದರ್ಭದಲ್ಲಿ ಅವರು ಘೋಷಿಸಿದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು.




















