ಬಳ್ಳಾರಿ / ಕಂಪ್ಲಿ : ರಾಜ್ಯದ ಜನರ ಶ್ರೇಯೋಭಿವೃದ್ಧಿ ದೃಷ್ಠಿಯಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಎಲ್ಲಾ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜೊತೆಗೆ ಜನರ ಪ್ರತಿಯೊಂದು ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ, ಇತ್ಯಾರ್ಥ ಮಾಡಬೇಕು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ಶಿಬಿರದಿನ್ನಿಯ ಪುರಸಭೆ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಾಗಿಲಿಗೆ ಬಂತುವ ಸರ್ಕಾರ ಸೇವೆಗೆ ಇರಲಿ ಸಹಕಾರದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಪಿಂಚಣಿ, ವೃದ್ಯಾಪ್ಯ ವೇತನ, ಗೃಹಲಕ್ಷ್ಮಿ ಸೇರಿದಂತೆ ಇನ್ನಿತರ ಯೋಜನೆಗಳು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು.
ಬಾಗಿಲಿಗೆ ಬಂತು ಸರ್ಕಾರ-ಸೇವೆಗೆ ಇರಲಿ ಸಹಕಾರ’ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರವು ಆರಂಭಿಸಿರುವ ‘ಪ್ರಜಾಸೇವಾ ಆಂದೋಲನ’, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸುವ ಅತ್ಯುತ್ತಮ ವೇದಿಕೆಯಾಗಿದೆ. ಸಾರ್ವಜನಿಕರು ಈ ಅಭಿಯಾನದ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ನಮ್ಮ ಕರ್ತವ್ಯವಾಗಿದೆ. ಈ ಪ್ರಜಾಸೇವಾ ಆಂದೋಲನದಲ್ಲಿ ಟಿಎಂಸಿ 3, ಆರ್ಡಿಪಿಒ, ಸಾರಿಗೆ ತಲಾ 1, ಲೋಕೋಪಯೋಗಿ ಇಲಾಖೆ 3, ಸಿಡಿಪಿಒ 4, ಎಡಿಎಲ್ಆರ್ 3, ಕಂದಾಯ 9, ಆರ್ಪಿಡಿಆರ್(ಟಿಪಿ) 24 ಸೇರಿದಂತೆ 66 ಅರ್ಜಿಗಳು ಸ್ವೀಕೃತಗೊಂಡಿದ್ದು, ಹಂತ ಹಂತದಲ್ಲಿ ಅರ್ಜಿಗಳ ವಿಲೇವಾರಿ ಮಾಡಲಾಗುವುದು ಎಂದರು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ.ಶ್ರೀಕುಮಾರ ಮಾತನಾಡಿ, ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಮನಮುಟ್ಟುವಂತಹ ಕೆಲಸ ಮಾಡಲಾಗುತ್ತಿದೆ. ಪ್ರಚಾರದ ಮೂಲಕ ಪ್ರತಿಯೊಂದು ಯೋಜನೆಗಳ ಜಾಗೃತಿ ಮೂಡಿಸಲಾಗುವುದು. ಉತ್ತಮವಾಗಿ ಸೇವೆಯನ್ನು ಕೊಡೋಣ. ಪ್ರತಿ ಶನಿವಾರ ಗ್ರಾಪಂ ಮತ್ರು ವಾರ್ಡ್ಗಳಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸಲಾಗುವುದು ಎಂದರು.
ವಿವಿಧ ಸರಕಾರಿ ಯೋಜನೆಗಳ ಪ್ರಮಾಣ ಪತ್ರಗಳನ್ನು ವಿತರಿಸಿದರು. ತದ ನಂತರ ಜನರ ಸಮಸ್ಯೆಗಳನ್ನು ಆಲಿಸಲು ತೆರೆದಿದ್ದ ಕೌಂಟರ್ಗಳಿಗೆ ತಹಶೀಲ್ದಾರ್ ಜೂಗಲ್ ಮಂಜುನಾಯಕ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿ, ಅರ್ಜಿಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸವಾಗಬೇಕೆಂದು ಸೂಚಿಸಿದರು. ತದನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ವಸ್ತು ಪ್ರದರ್ಶವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಎಡಿ ಮಲ್ಲನಗೌಡ ಕೆ.ಎಸ್, ನೀರಾವರಿ ಇಲಾಖೆಯ ಎಇಇ ಶ್ರೀನಿವಾಸ, ಪಶುಸಂಗೋಪಾನ ಅಧಿಕಾರಿ ಬಸವರಾಜ, ತಾಲೂಕು ಆರೋಗ್ಯ ಅಧಿಕಾರಿ ಡಾ.ಅನೀಲ್ ಕುಮಾರ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಭೂಮಾಪನ ಇಲಾಖೆಯ ಎಡಿಎಲ್ ಆರ್ ನರಸಪ್ಪ, ಎಸಿಡಿಪಿಒ ಮೋಹನ್ ಕಳಸಾಪುರ ಸೇರಿದಂತೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















