ಸಿರುಗುಪ್ಪ: ಸ್ವಚ್ಛತೆಯ ಮಹತ್ವವನ್ನು ಸಾರುವ ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಉದ್ದೇಶದಿಂದ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ವತಿಯಿಂದ ‘ಸ್ವಚ್ಛತಾ ಹೀ ಸೇವಾ 2026’ ಅಭಿಯಾನದಡಿ ಸ್ವಚ್ಛತಾ ಜಾಥಾ ಹಮ್ಮಿಕೊಳ್ಳಲಾಯಿತು.
ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದ ಜಾಥಾ ಬಸ್ ನಿಲ್ದಾಣ, ಮುಖ್ಯ ಬೀದಿ ಸೇರಿದಂತೆ ಪಟ್ಟಣದ ವಿವಿಧ ಪ್ರಮುಖ ಪ್ರದೇಶಗಳಲ್ಲಿ ನಡೆಯಿತು. ಸ್ವಚ್ಛತೆ ಕಾಪಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ವಿದ್ಯಾರ್ಥಿನಿಯರು ಅಭಿಯಾನಕ್ಕೆ ಕಳೆ ತಂದರು.
ಸ್ವಚ್ಛತೆ ನಮ್ಮೆಲ್ಲರ ಹೊಣೆ : ಪಟ್ಟಣದ ಸ್ವಚ್ಛತೆ ಕಾಪಾಡುವುದು ಕೇವಲ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರಿಕರೂ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ನಿಗದಿತ ಸ್ಥಳದಲ್ಲಿ ಹಾಕುವ ಮೂಲಕ ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂಬ ಸಂದೇಶವನ್ನು ಜಾಥಾದಲ್ಲಿ ಸಾರಲಾಯಿತು.
ಶಾಲಾ ಮಕ್ಕಳ ಭಾಗವಹಿಸುವಿಕೆಯಿಂದ ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರ ಗಮನ ಸೆಳೆಯಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಹಾಗೂ ಸ್ವಚ್ಛತಾ ಜವಾಬ್ದಾರಿಯ ಅರಿವು ಮೂಡಿಸುವ ನಿಟ್ಟಿನಲ್ಲಿಯೂ ಕಾರ್ಯಕ್ರಮ ಮಹತ್ವ ಪಡೆದಿತು.
ಜಾಥಾದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಹಾಗೂ ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಣಾಧಿಕಾರಿ ಅನ್ನಪೂರ್ಣ, ಕಮ್ಯುನಿಟಿ ಮೊಬೈಲೈಸರ್ಗಳಾದ ರೇಷ್ಮ, ಹುಲಿಗೆಮ್ಮ, ಹಸನ್ ಸಾಬ್ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್ ,ಸಿರುಗುಪ್ಪ




















