
ತಿಮ್ಮಾಪುರ ಮಾರುತೇಶ್ವರ ಬಸವೇಶ್ವರ ಜಾತ್ರೆಯಲ್ಲಿ ಹಡಗಲಿಯಲ್ಲಿ ಹೇಳಿಕೆ ತಿಮ್ಮಾಪುರದಲ್ಲಿ ಪಲ್ಲಕ್ಕಿ ಉತ್ಸವ ಅರ್ಚಕರ ಹತಾರ ಸೇವೆ ಸುತ್ತುಗಾಯ ಹೊಡೆಯುವುದು ಹೇಳಿಕೆಗಳು ವಿಶಿಷ್ಟ ಆಚರಣೆಗಳು ಹಾಗೂ ಮಹಾರಥೋತ್ಸವ.
ಹುನಗುಂದ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಸೆಪ್ಟಂಬರ್ 19 ಹಾಗೂ 21 ರಂದು ಮಾರುತೇಶ್ವರ ಹಾಗೂ ಬಸವೇಶ್ವರ ಜಾತ್ರೆಯು ಸೋಮವಾರ ಜರುಗಲಿದ್ದು ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡು ದೇವರು ಕೃಪೆಗೆ ಪಾತ್ರರಾಗಬೇಕೆಂದು ತಿಮ್ಮಾಪುರ ಗ್ರಾಮಸ್ಥರು ವಿನಂತಿಸಿದ್ದಾರೆ.

ಜಾತ್ರೆಯ ಅಂಗವಾಗಿ ದಿನಾಂಕ 19 ರಂದು ಶನಿವಾರ ರಾತಿ ೮ಕ್ಕೆ ಶ್ರೀ ಮಾರುತೇಶ್ವರ ಪಲ್ಲಕ್ಕಿ ಹಾಗೂ ನೂರಾರು ಭಕ್ತರು ಬರಿಗಾಲಿನಿಂದ ತಿಮ್ಮಾಪುರ ಪತ್ರಿಗಿಡದ ಬಸವೇಶ್ವರನಿಗೆ ಪೂಜೆ ಸಲ್ಲಿಸಿ ನಂತರ ಕಿರಸೂರ ಗ್ರಾಮಕ್ಕೆ ತೆರಳುತ್ತಾರೆ. ಅಲ್ಲಿನ ಗ್ರಾಮಸ್ಥರು ಶ್ರೀ ಮಾರುತೇಶ್ವರ ಪಲ್ಲಕ್ಕಿ ಹಾಗೂ ಭಕ್ತರನ್ನು ಬರಮಾಡಿಕೊಂಡು ಊರಿನ ಹನಮಂತ ದೇವರಿಗೆ ಪೂಜೆ ಸಲ್ಲಿಸುವರು.
ಅಲ್ಲಿಂದ ಗ್ರಾಮಸ್ಥರು ಡೊಳ್ಳಿನ ಸಂಗಡ ೫ ಕುಂಬಳ ಎಲೆ ತೆಗೆದುಕೊಂಡು ರಾತ್ರಿ ೧೨-೦೦ ಘಂಟೆಯ ಸುಮಾರಿಗೆ ಹಡಗಲಿ ಸಮೀಪದ ಮಲಪ್ರಭಾ ನದಿಗೆ ತೆರಳುತ್ತಾರೆ.
ಮಲಪ್ರಭಾ ನದಿಯಲ್ಲಿ ಸ್ನಾನ ಮಾಡಿದ ನಂತರ ಹೊಳೆಯಲ್ಲಿ ಪೂಜೆ, ಪುನಸ್ಕಾರಗಳು ನಡೆದು ಹಡಗಲಿ ಗ್ರಾಮಕ್ಕೆ ತೆರಳಿ ಅಲ್ಲಿಯ ಹನಮಂತ ದೇವರಿಗೆ ಪೂಜೆ ಸಲ್ಲಿಸಿದ ನಂತರ ಬೆಳಿಗ್ಗೆ ೪-೦೦ ರ ಸುಮಾರಿಗೆ ಹನುಮಂತ ದೇವರ ಕಟ್ಟೆಯ ಮೇಲೆ ಮಾರುತೇಶ್ವರ ಪೂಜಾರಿಯು ಭವಿಷ್ಯದ ನುಡಿ ಮಳೆ, ಬೆಳೆ, ಹೇಳಿಕೆ ನಡೆಯುವದು. ನಂತರ ಪಲ್ಲಕ್ಕಿ ಹಾಗೂ ಭಕ್ತರಿಗೆ ಕುರಹಟ್ಟಿ ಸಹೋದರರು ಅಲ್ಪಾಹಾರದ ಸೇವೆ ಸಲ್ಲಿಸುತ್ತಾರೆ. ನಂತರ ಮರಳಿ ಪಲ್ಲಕ್ಕಿಯೊಂದಿಗೆ ಗ್ರಾಮಕ್ಕೆ ಬಂದು ತಲುಪುತ್ತಾರೆ.
ಸೆ. 20ರಂದು ರವಿವಾರ ಮುಂಜಾನೆ ೮=೦೦ ಕ್ಕೆ ಶ್ರೀ ಮಾರುತೇಶ್ವರ ಹಾಗೂ ಶ್ರೀ ಬಸವೇಶ್ವರ ದೇವರಿಗೆ ರುದ್ರಾಭಿಷೇಕ ನಡೆದು ಸಕಲ ವಾದ್ಯ-ಮೇಳದೊಂದಿಗೆ ಕಳಸದ ಮೆರವಣಿಗೆ. ಗೋಪುರಕ್ಕೆ ಕಳಸಾರೋಹಣ, ಮುಂಜಾನೆ ೧೧=೦೦ ಕ್ಕೆ ಶ್ರೀ ಮಾರುತಿ ದೇವರ ಪಲ್ಲಕ್ಕಿಯನ್ನು ಶ್ರೀ ವಿರುಪಾಕ್ಷಗೌಡ ದಾದ್ಮಿಯವರ ಹೊಲದಿಂದ ದೇವಸ್ಥಾನಕ್ಕೆ ಕರೆ ತರಲಾಗುವುದು. ನಂತರ ಹೊಳೆಯಿಂದ ತಂದ ನೀರನ್ನು ದೇವರಿಗೆ ಜಲಾಭೀಶೇಕ ನಡೆಯುತ್ತದೆ. ಮಧ್ಯಾಹ್ನ ೧೨=೦೦ ಘಂಟೆಗೆ ಪೂಜಾರಿಗಳಿಂದ ವಿಶಿಷ್ಟವಾದ ಹತಾರ ಸೇವೆ ನಡೆಯಲಿದೆ
ಸಾಯಂಕಾಲ ೪=೦೦ ಪೂಜಾರಿ ಮನೆಯಿಂದ ಮಾವಿನ ಮರತಪ್ಪ ಎಂಬ ಹನಮಂತ ದೇವರ ಮೂರ್ತಿಯನ್ನು ದೇವಸ್ಥಾನಕ್ಕೆ ತರಲಾಗುತ್ತದೆ. ೫ ಕ್ಕೆ ವಿಶಿಷ್ಟ ರೀತಿಯ ಹತಾರ ಸೇವೆಯೊಂದಿಗೆ ನಡೆದು ಇದೇ ಸಂದರ್ಭದಲ್ಲಿ ಸುತಕಾಯಿ (ತೆಂಗಿನಕಾಯಿ)ಒಡೆಯುವ ಕಾರ್ಯ ನಡೆಯುವುದು. ನಂತರ ಹನಮಂತ ದೇವರ ಪೂಜಾರಿಯು ಭರಮದೇವರ ಕಟ್ಟೆಯ ಮೇಲೆ ನಿಂತು ಹತಾರ ಸೇವೆ ಆದ ನಂತರ ಭವಿಷ್ಯದ ಮಳೆ, ಬೆಳೆಗಳ ಬಗ್ಗೆ ಹೇಳಿಕೆ ನಡೆಯುವುದು. ಅಂದು ರಾತ್ರಿ 9.30ಗಂಟೆಗೆ ಹುಬ್ಬಳ್ಳಿಯ ಸಂಗೀತ ಕಲಾವಿದೆ ಶ್ರೀಮತಿ ಸೌಮ್ಯ ಮಂಜುನಾಥ ಹೊಸಬಾಳ ಹಾಗೂ ಮಂಜುನಾಥ ಹೊಸ ಬಾಳೆ ರವರ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ.
ಸೆ. 21ರಂದು ಬಸವೇಶ್ವರನಿಗೆ ರುದ್ರಾಭಿಷೇಕ, ನಂತರ ಮಧ್ಯಾಹ್ನ ಲಘು ರಥೋತ್ಸವ ನಂತರ, ಮಹಾ ರಥೋತ್ಸವ ಜರುಗಲಿದೆ ಅಂದು ರಾತ್ರಿ 10:00ಗೆ ವೀರೇಶ ಅಡಿವಾಳ ಅವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ
ಎಂದು ಜಾತ್ರಾ ಸಮಿತಿ ತಿಳಿಸಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸುತ್ತಮುತ್ತಲಿನ ಸಕಲ-ಸದ್ಭಕ್ತರು ಪಾಲ್ಗೊಂಡು ಶ್ರೀ ಮಾರುತೇಶ್ವರ ಹಾಗೂ ಬಸವೇಶ್ವರನ ಕೃಪೆಗೆ ಪಾತ್ರರಾಗಬೇಕೆಂದು ಗ್ರಾಮಸ್ಥರ ಪರವಾಗಿ ಸ್ಥಳೀಯ ಸ್ವಾಮಿ ವಿವೇಕಾನಂದ ಯುವಕ ಮಂಡಳದ ಸದಸ್ಯ ಹಾಗೂ ಪತ್ರಕರ್ತ ಜಗದೀಶ ಹದ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




















