“ಸರಕಾರಿ ಸಿಬ್ಬಂದಿಗಳು ಪ್ರಾಮಾಣಿಕತೆ,ಪಾರದರ್ಶಕತೆ ಅಳವಡಿಸಿಕೊಳ್ಳಿ” -ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಯಂತಕುಮಾರ
ಯಾದಗಿರಿ:ಸರಕಾರಿ ಸಿಬ್ಬಂದಿಗಳು ಪ್ರಾಮಾಣಿಕತೆ, ಪಾರದರ್ಶಕತೆ ಅಳವಡಿಸಿಕೊಳ್ಳುವ ಮೂಲಕ ನೈತಿಕ ಮೌಲ್ಯವನ್ನು ಹೆಚ್ಚಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಬಿ.ಜಯಂತಕುಮಾರ ಅವರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಶನಿವಾರರಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಜಿಲ್ಲಾ ಪೊಲೀಸ್ ಇಲಾಖೆ, ಯಾದಗಿರಿ ಕರ್ನಾಟಕ ಲೋಕಾಯುಕ್ತ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹವನ್ನು ಸಸಿಗೆ ನಿರೂಣಿಸುವ ಮೂಲಕ ಹಾಗೂ ಪ್ರತಿಜ್ಞಾವಿಧಿ ಭೋದಿಸಿ ಅವರು ಮಾತನಾಡಿದರು.
ಸಾರ್ವಜನಿಕರ ತೊಂದರೆಗಳಿಗೆ ಸಕಾಲಕ್ಕೆ ಸ್ಪಂದಿಸಬೇಕು ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಕೆಲಸದ ಮೂಲಕ ಅವರಿಗೆ ನೆರವಾಗಬೇಕು ತನಗೆ ಹಾಗೂ ಒಳ್ಳೆಯ ಸಮಾಜ ಮತ್ತು ಒಳ್ಳೆಯ ಪ್ರಪಂಚಕ್ಕಾಗಿ ಸೇವೆ ಮಾಡುವ ಮೂಲಕ ತಮ್ಮ ನೈತಿಕ ಮೌಲ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರಕಾರಿ ನೌಕರರು ಶ್ರದ್ಧೆ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು,ಜನರಿಗೆ ತೊಂದರೆಯಾಗದ ರೀತಿಯಲ್ಲಿ ಅವರಿಗೆ ಸ್ಪಂದಿಸುವ ಜೊತೆಗೆ ನಿಗದಿತ ಅವಧಿಯೊಳಗೆ ಅವರ ಸಮಸ್ಯೆಗಳನ್ನು ನಿವಾರಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ಒಳ್ಳೆಯ ವ್ಯವಸ್ಥೆ ನೀಡಲು ಸಹಕಾರಿಯಾಗಲಿದ್ದು,ಮಾತು ಹಾಗೂ ಕೃತಿಯಲ್ಲಿ ವ್ಯತ್ಯಾಸ ಮಾಡದೇ ಪ್ರಾಮಾಣಿಕ ಸೇವೆ ಕಲ್ಪಿಸುವಂತೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ್ ಅವರು ಉತ್ತಮ ಸಮಾಜ ನಿರ್ಮಾಣಕ್ಕಾಗಿ ನಿಷ್ಠೆಯಿಂದ ಸೇವೆಸಲ್ಲಿಸಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಿಸಲು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಅವರು ಅಕ್ಟೋಬರ್ 30 ರಿಂದ ನವೆಂಬರ್ 5ರ ವರೆಗೆ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ ದೇಶದ ಆರ್ಥಿಕ,ರಾಜಕೀಯ, ಹಾಗೂ ಸಾಮಾಜಿಕ ಅಭಿವೃದ್ಧಿಗೆ ಎಲ್ಲರೂ ಸಂವಿಧಾನ ಬದ್ಧವಾಗಿ ಹಾಗೂ ಕಾನೂನು ಪರವಾಗಿ ನಡೆದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಸಾದ್ಯ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಭಾರತವು ಸದೃಢ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು,ಜನರಿಗಾಗಿ ಜನರಿಗೋಸ್ಕರ ಹಾಗೂ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಸರಕಾರಿ ನೌಕರರು ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಜೀವನದಲ್ಲಿ ಹಾಗೂ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು, ಸಾರ್ವಜನಿಕರ ಕುಂದು ಕೊರತೆಗಳ ನಿವಾರಣೆಗೆ ಜಿಲ್ಲೆಯಾದ್ಯಂತ ಜನತಾ ದರ್ಶನ ಹಮ್ಮಿಕೊಂಡು ಸ್ಪಂದಿಸಲಾಗುತ್ತಿದೆ ಅಧಿಕಾರಿಗಳು ಕೂಡ ತಮ್ಮ ಕೆಳಹಂತದ ಸಿಬ್ಬಂದಿಗಳ ಕಾರ್ಯವೈಖರಿಯಲ್ಲಿ ಬದಲಾವಣೆ ತಂದುಕೊಂಡು ಸಾರ್ವಜನಿಕರ ಕುಂದುಕೊರತೆಗಳಿಗೆ ಸಕಾಲಕ್ಕೆ ಸ್ಪಂದಿಸಿದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ರವೀಂದ್ರ ಹೊನೋಲೆ,ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಾಹಿಲ್ ಅಹ್ಮದ ಕುನ್ನಿಭಾವಿ, ಹೆಚ್ಚುವರಿ ಕಿರಿಯ ಶ್ರೇಣಿ ನ್ಯಾಯಾಧೀಶರು ಶ್ರೀ ರಾಹುಲ್ ಚಾಂಬರ್,ಯಾದಗಿರಿ ಕರ್ನಾಟಕ ಲೋಕಾಯುಕ್ತ ಡಿಎಸ್ಪಿ ಹಣಮಂತರಾಯ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಅವರು ಮಾಡಿದರು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪಿ.ಎಸ್.ರಾಠೋಡ ವಂದಿಸಿದರು. (ಭ್ರಷ್ಟಾಚಾರ ತೊಲಗಿಸಿ,ದೇಶದ ಹಿತ ಕಾಯಿರಿ) ಈ ಸಪ್ತಾಹದ ಘೋಷವಾಕ್ಯವಾಗಿದೆ.
ವರದಿ:ಶಿವರಾಜ ಸಾಹುಕಾರ ವಡಗೇರಾ



















