ಚಾಮರಾಜನಗರ:ಸಂವಿಧಾನ ಜಾಗೃತಿ ಸ್ತಬ್ದ ಚಿತ್ರವು ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ಮಾರ್ಗದಲ್ಲಿ ನಿನ್ನೆ ಸಂಚಾರ ನಡೆಸಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.
ಗ್ರಾಮದಲ್ಲಿ ಬೈಕ್ ರ್ಯಾಲಿಯನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.ಶಾಲಾ ವಿದ್ಯಾರ್ಥಿನಿಯರ ಕೋಲಾಟ,ಸಾಮೂಹಿಕ ನೃತ್ಯ,ಡೊಳ್ಳುಕುಣಿತ,ತಮಟೆ ವಾದ್ಯ ವಿಶೇಷವಾಗಿದ್ದವು.
ಪೊನ್ನಾಚಿ ಗ್ರಾಮದ ಮುಖಂಡರಾದ ಪೊನ್ನಾಚಿ ಮಹದೇವಸ್ವಾಮಿ ಅವರು ಮಾತನಾಡಿ ನಾವೆಲ್ಲರೂ ನಮ್ಮ ದೇಶದ ಸಂವಿಧಾನವನ್ನು ಅರಿಯಬೇಕು. ಸಂವಿಧಾನ ಜಾಥಾವು ನಮ್ಮ ಊರಿಗೆ ಬಂದಿರುವುದು ನಾವೆಲ್ಲರೂ ಹೆಮ್ಮೆ ಪಡುವ ವಿಚಾರ ಎಂದು ಸಂತಸ ವ್ಯಕ್ತಪಡಿಸಿದರು.
ಸಂವಿಧಾನ ರಚನಾ ಸಭೆ ಹಾಗೂ ಸಂವಿಧಾನದ ಕುರಿತ ವೀಡಿಯೋ ತುಣುಕುಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು.ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪೊನ್ನಾಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಾಂಬಿಕಾ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕೇಶ್,ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು,ಜನಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
ವರದಿ:ಉಸ್ಮಾನ್ ಖಾನ್



















