ಬಳ್ಳಾರಿ/ ಕಂಪ್ಲಿ : ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತಾಪಂ, ಗ್ರಾ.ಪಂ ಸಹಯೋಗದಲ್ಲಿ ಆಯೋಜಿಸಿರುವ ಕೂಸಿನ ಮನೆ ತರಬೇತಿ ಕೇಂದ್ರಕ್ಕೆ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸಿಇಒ ಅವರು ಪತ್ರಕರ್ತರೊಂದಿಗೆ ಮಾತನಾಡಿ, ತಾ.ಪಂ ಮಟ್ಟದಲ್ಲಿ ಪ್ರತಿಯೊಂದು ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಪಟ್ಟಣ, ಗ್ರಾಮೀಣ ಪ್ರದೇಶದಲ್ಲಿ ಜನತೆಗೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವ ನಿಟ್ಟಿನಲ್ಲಿ ಜಾಗೃತಿವಹಿಸಬೇಕು. ರಸ್ತೆ, ಕುಡಿಯುವ ನೀರು, ಬೀದಿದೀಪ ಸೇರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸಿದಾಗ ಮಾತ್ರ ನಮ್ಮ ಸೇವೆಗೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿ ವರ್ಗ ಕೆಲಸ ಮಾಡುವ ವಿಶ್ವಾಸವಿದೆ. ಮೊದಲ ಬಾರಿಗೆ ಕಂಪ್ಲಿ ಕಡೆಗೆ ಭೇಟಿ ನೀಡಿದಾಗ ದೇವಲಾಪುರ ಗ್ರಾ.ಪಂ. ಯ ಸೋಮಲಾಪುರದ ರಸ್ತೆ ಪರಿಶೀಲಿಸಲಾಯಿತು. ನಂತರ ಕಂಪ್ಲಿಯ ಮಿನಿ ವಿಧಾನಸೌಧದ ಬಳಿಯಲ್ಲಿ ನಡೆಯುತ್ತಿರುವ ತಾ.ಪಂ. ಯ ಕಟ್ಟಡ ಕಾಮಗಾರಿ ಪರಿಶೀಲಿಸಲಾಗಿದೆ ಎಂದರು.
ನಂತರ ಇಲ್ಲಿನ ಕೂರಿನ ಮನೆ ತರಬೇತಿ ಕೇಂದ್ರದಲ್ಲಿ ತಾಪಂ, ಗ್ರಾ.ಪಂ ಅಧಿಕಾರಿಗಳೊಂದಿಗೆ ಕಂಪ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುವ ಜತೆಗೆ ಮುಂದಿನ ದಿನದಲ್ಲಿ ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಆರ್.ಕೆ.ಶ್ರೀಕುಮಾರ, ನರೇಗಾ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ : ಜಿಲಾನ್ ಸಾಬ್ ಬಡಿಗೇರ