
ಬೆಳಗಾವಿ|| ಚಿಕ್ಕೋಡಿ: ಚಿಕ್ಕೋಡಿ ಸರ್ಕಾರಿ ಆಸ್ಪತ್ರೆ ಸಾಮಾನ್ಯ ಜನರು ಚಿಕಿತ್ಸೆ ಪಡೆಯುವಂಥ ಸ್ಥಿತಿಯಲ್ಲಿಲ್ಲ. ಈ ಅವ್ಯವಸ್ಥೆ ಕುರಿತು ನಾನು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಸರ್ಕಾರ ಬಡಜನರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ರೂಪಿಸಿದೆ. ಅದರಲ್ಲೂ ವಿಶೇಷವಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಆದರೆ, ಇಲ್ಲಿನ ಕೆಲವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆ ನಿರ್ಲಕ್ಷ್ಯಕ್ಕೊಳಗಾಗಿ ಅವ್ಯವಸ್ಥೆ ತಾಂಡವವಾಡುತ್ತಿದೆ, ನಾನು ಕರ್ನಾಟಕದ ಬಹುತೇಕ ಜಿಲ್ಲೆಗಳ ಹಲವಾರು ಆಸ್ಪತ್ರೆಗಳನ್ನು ನೋಡಿದ್ದೇನೆ. ಆದರೆ ಇಂಥ ಅವ್ಯವಸ್ಥೆಯನ್ನು ಎಲ್ಲೂ ಕಂಡಿಲ್ಲ ಇಲ್ಲಿ ಸ್ವಚ್ಛತೆ ಎಂಬುದೇ ಮರೆಯಾಗಿದೆ ಎಂದರು.
ಗ್ರೂಪ್ ಡಿ ನೌಕರರಿಗೆ ಇಲ್ಲಿ ಕಡಿಮೆ ಸಂಬಳ ನೀಡುತ್ತಿದ್ದಾರೆ. ಸರ್ಕಾರದಿಂದ ನಿಗದಿಪಡಿಸಿರುವ ಸಂಬಳ ನೀಡಬೇಕೆಂದು ಸ್ಥಳದಲ್ಲಿದ್ದ ಚಿಕ್ಕೋಡಿ ಉಪವಿಭಾಗಾಧಿಕಾರಿಗಳಾದ ಸಂತೋಷ ಸಂಪಗಾಂವಿ ಅವರಿಗೆ ಸೂಚನೆ ನೀಡಿದರು.
ಸರ್ಕಾರ ಒಂದು ಆಸ್ಪತ್ರೆಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಈ ತಾಲೂಕು ಆಸ್ಪತ್ರೆಯಲ್ಲಿ ಕೇವಲ 20 ಜನ ಒಳ ರೋಗಿಗಳಿದ್ದಾರೆ. ಇದರಿಂದಲೇ ಇಲ್ಲಿನ ವ್ಯವಸ್ಥೆ ಗೊತ್ತಾಗುತ್ತದೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ರೋಗಿಗಳು ಹಾಗೂ ಆರೋಗ್ಯ ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿದರು. ಆಸ್ಪತ್ರೆಯಲ್ಲಿನ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಒಳ ರೋಗಿಗಳ ಕೋಣೆ ಕಂಡು ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಶುಚಿತ್ವ ಕಾಪಾಡದ ಹಿನ್ನೆಲೆಯಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಮಹೇಶ್ ನಾಗರಬೆಟ್ಟ ಅವರನ್ನು ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿಗೆ ಸರಿಯಾಗಿ ವೇತನ ನೀಡದ ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳುವಂತೆ ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂತೋಷ ಸಂಪಗಾಂವಿ ಅವರಿಗೆ ಸೂಚನೆ ನೀಡಿದರು.
ವರದಿ. ವಿಠ್ಠಲ ಖೋಕಾಟೆ ಕರುನಾಡ ಕಂದ ಅಥಣಿ.



















