
ಯಾದಗಿರಿ/ ಕಡೆಚೂರು: ಗ್ರಾಮೀಣ ಭಾಗದ ಮಹಿಳೆಯರು ನಲ್ ಜಲ್ ಮಿತ್ರ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಾಡಿಯ ಹೇಳಿದರು.
ಕಡೆಚೂರು ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ನಲ್ ಜಲ್ ಮಿತ್ರ ಯೋಜನೆಯ ನೀರು ವಿತರಣಾ ನಿರ್ವಾಹಕ ಬಹು ಕೌಶಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತರಬೇತಿಯಲ್ಲಿ ವಿತರಿಸಲಾಗುವ ಕಿಟ್ ಕುರಿತು ಸಂಪೂರ್ಣ ಮಾಹಿತಿ ಪಡೆಯಬೇಕು, ಇದರಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುವಾಗ ಸಹಕಾರಿಯಾಗುತ್ತದೆ. ಮಹಿಳೆಯರಿಗೆ ನಲ್ಲಿ ನೀರಿನ ವಿತರಣಾ ವ್ಯವಸ್ಥೆ ಮತ್ತು ನೀರಿನ ಪ್ರಾತ್ಯಕ್ಷಿಕೆ ನೀಡಬೇಕು ಎಂದು ಹೇಳಿದರು.
ಈಗಾಗಲೇ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಿಗೆ ತರಬೇತಿ ನೀಡಿ ಸ್ವ ಉದ್ಯೋಗಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ನೀರು ವಿತರಣಾ ನಿರ್ವಾಹಕರಿಗೆ ಬಹು ಕೌಶಲ್ಯ ತರಬೇತಿ ನೀಡಲಾಗುತ್ತದೆ. ಮಹಿಳೆಯರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ರವಿಚಂದ್ರ ಮಾತನಾಡಿ, ಈ ಸಂಸ್ಥೆಯಲ್ಲಿ ತಮಗೆ ಎಲ್ಲಾ ರೀತಿಯ ಸೌಲಭ್ಯಗಳು ಸಿಗುತ್ತವೆ. ಗ್ರಾಮೀಣ ಭಾಗದ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಯೋಜನಾ ನಿರ್ದೇಶಕ ಸಿಬಿ ದೇವರ ಮನೆ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಆನಂದ್ ನಲ್ ಜಲ್ ಮಿತ್ರ ಯೋಜನೆಯ ಅಧಿಕಾರಿಗಳಾದ ಗಿರೀಶ್, ಸುಮಂಗಲ, ರಮೇಶ್, ಕೇಂದ್ರದ ಸಿಬ್ಬಂದಿ ಮತ್ತು ಮಹಿಳೆಯರು ಉಪಸ್ಥಿತರಿದ್ದರು.
ವರದಿ: ಜಗದೀಶ್ ಕುಮಾರ್ ಭೂಮಾ



















