ಬಳ್ಳಾರಿ/ ಕಂಪ್ಲಿ : ಸ್ಥಳೀಯ ಪಟ್ಟಣದ ಬಾಲಕೀಯರ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬಳ್ಳಾರಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಹಕಾರದಲ್ಲಿ ಬಾಲ್ಯ ವಿವಾಹ, ಫೋಕ್ಸೋ ಕಾಯ್ದೆ, ಮೂಢನಂಬಿಕೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಮಾಜಿ ಸದಸ್ಯರಾದ ಎಚ್.ಸಿ.ರಾಘವೇಂದ್ರ ಮಾತನಾಡಿ ಮಕ್ಕಳ ಹಕ್ಕುಗಳ ಬಗ್ಗೆ ಹಲವಾರು ಕಾಯ್ದೆಗಳಿದ್ದರೂ ಸಹಿತ ಇನ್ನೂ ಬಾಲ್ಯ ವಿವಾಹಗಳು, ಮಕ್ಕಳ ಮೇಲೆ ದೌರ್ಜನ್ಯ, ಮೂಡನಂಬಿಕೆಗಳು ನಡೆಯುತ್ತಿರುವುದು ಸಮಾಜ ತಲೆತಗ್ಗಿಸುವ ಸಂಗತಿಯಾಗಿದೆ. ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತಮ್ಮ ಅಕ್ಕಪಕ್ಕ ಬಾಲ್ಯ ವಿವಾಹಗಳು ನಡೆಯುತ್ತಿದ್ದರೆ ಅವುಗಳ ಬಗ್ಗೆ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಬಳ್ಳಾರಿಯ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿ ಚನ್ನಬಸಪ್ಪ ಪಾಟೀಲ್ ಮಾತನಾಡಿ ಫೋಕ್ಸೋ ಕಾಯ್ದೆ, ಬಾಲ್ಯ ವಿವಾಹ ತಡೆ ಕಾನೂನುಗಳನ್ನು ಕುರಿತು ವಿವರಿಸಿದರು. ಜಾಗೃತಿ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಮಹ್ಮದ್ ಶಫಿ, ಉಪ ಪ್ರಾಚಾರ್ಯ ಬಸವರಾಜ ಪಾಟೀಲ್,ಉಪಪ್ರಾಚಾರ್ಯೆ ಸುಜಾತಾ, ರೀಡ್ ಸಂಸ್ಥೆಯ ಯಲ್ಲಪ್ಪ ಹಾಗೂ ಇತರರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅನೇಕ ವಿದ್ಯಾರ್ಥಿನಿಯರು ತಮ್ಮಲ್ಲಿರುವ ಅನೇಕ ಸಂಶಯಗಳಿಗೆ ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಪಡೆದರು.ಜಾಗೃತಿ ಕಾರ್ಯಕ್ರಮದಲ್ಲಿ ಇಸಿಒ ಟಿ.ಎಂ.ಬಸವರಾಜ, ಎಎಸ್ಐ ಎಚ್.ಈರಣ್ಣ,ಮಹಿಳಾ ಸಂಘದ ಅಧ್ಯಕ್ಷೆ ದ್ರಾಕ್ಷಾಯಣಿ, ತಾ.ಪಂ.ನ ಅಪರಂಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ಲತೀಫಾ ಬೇಗಂ ಸೇರಿದಂತೆ ಇತರರು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ



















