ಕಲಬುರಗಿ: ಸುಪ್ರಿಂಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ಮಾಡುವಂತೆ ಆಗ್ರಹಿಸಿ, ಆಗಸ್ಟ್ 1ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಾಗೂ ಆ.10 ರ ನಂತರ ಅಸಹಕಾರ ಚಳವಳಿ ನಡೆಸಲಾಗುವುದು ಎಂದು ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಖಾಸಗಿ ಹೋಟಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಗೆ ಆದೇಶ ನೀಡಿ ಆಗಸ್ಟ್ 1ಕ್ಕೆ ಒಂದು ವರ್ಷ ಪೂರ್ಣವಾಗುತ್ತದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಅನುಷ್ಠಾನಕ್ಕಾಗಿ ಕಾಲಹರಣ ಮಾಡುತ್ತಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಮೊದಲ ಸಚಿವ ಸಂಪುಟದಲ್ಲಿ ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದರು. ಆದರೆ ಈವರೆಗೂ ಅನುಷ್ಠಾನಕ್ಕೆ ತರದೇ ರಾಜ್ಯ ಕಾಂಗ್ರೆಸ್ ಸರ್ಕಾರ ಶೋಷಿತ ಸಮುದಾಯಕ್ಕೆ ನಿರ್ಲಕ್ಷಿಸುತ್ತಿದೆ ಎಂದು ಅವರು ಆರೋಪಿಸಿದರು.
ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹಾದೇವಪ್ಪ ಅವರು ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ 3 ತಿಂಗಳಲ್ಲೇ ತೆಲಂಗಾಣ, 8 ತಿಂಗಳಲ್ಲಿ ಆಂಧ್ರಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಆದರೆ, ರಾಜ್ಯದಲ್ಲಿ ಮಾತ್ರ ದತ್ತಾಂಶ ನೆಪವೊಡ್ಡಿ ಒಳ ಮೀಸಲಾತಿ ವಿರೋಧಿ ನೀತಿಯನ್ನು ಅನುರಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ತುಳಿತಕ್ಕೊಳಗಾದವರಿಗೆ ನಿಜವಾದ ನ್ಯಾಯ ದೊರೆಯಬೇಕಾದರೆ ಒಳ ಮೀಸಲಾತಿ ಅಗತ್ಯವಾಗಿದ್ದು, ಈ ಕೂಡಲೇ ಒಳ ಮೀಸಲಾತಿ ಕೊಟ್ಟರೆ ಎಂಬಿಬಿಎಸ್, ಐಐಟಿ, ನರ್ಸಿಂಗ್ ಕೋರ್ಸ್ ಸೇರಿದಂತೆ ವಿವಿಧ ಟೆಕ್ನಿಕಲ್ ಕೋರ್ಸ್ ಮತ್ತು ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಬಸವರಾಜ ಮತ್ತಿಮಡು, ಉಮೇಶ್ ಜಿ. ಕಾರಜೋಳ, ರಾಜು ವಾಡೇಕಾರ, ಲಿಂಗರಾಜ ತಾರಪೈಲ್, ಶ್ಯಾಮ ನಾಟೀಕಾರ, ರಮೇಶ ವಾಡೇಕಾರ, ಮಲ್ಲಿಕಾರ್ಜುನ ಜಿನಕೇರಿ, ಗೋಪಾಲರಾವ ಕಟ್ಟಿಮನಿ, ಮಂಜುನಾಥ ನಾಲವಾರಕರ್ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.
- ಕರುನಾಡ ಕಂದ



















