ಯಾದಗಿರಿ/ ಗುರುಮಠಕಲ್: ಅ.9 ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿದ್ದು, ಅರ್ಹ ನೋಂದಣಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಗುರುಮಠಕಲ್ ತಹಸೀಲ್ದಾರ್ ಶಾಂತಗೌಡ ಬಿರಾದಾರ್ ತಿಳಿಸಿದ್ದಾರೆ.
ನವೆಂಬರ್ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಈ ಹೊಸ ಪಟ್ಟಿ ಸಿದ್ಧಪಡಿಸುವ ಕಾರ್ಯ ಆರಂಭವಾಗಿದೆ. ಹಿಂದಿನ ಪಟ್ಟಿಯಲ್ಲಿ ಹೆಸರು ಹೊಂದಿರುವ ಮತದಾರರು ಕೂಡ ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಮಾರ್ಗಸೂಚಿಯಂತೆ ವೇಳಾಪಟ್ಟಿಯು ನವೆಂಬರ್ 6, ಅರ್ಜಿ ನಮೂನೆ 19 ಸ್ವೀಕರಿಸಲು ಕೊನೆಯ ದಿನವಾಗಿದೆ. ನವೆಂಬರ್ 25ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗುವದು. ನವೆಂಬರ್ 25 ರಿಂದ ಡಿಸೆಂಬರ್ 10ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ಅವಧಿ. ಡಿ.30 ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವದು.
ಅರ್ಹತೆ: ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ, 2025ರ ನವೆಂಬರ್ 1ಕ್ಕೆ ಮುಂಚಿನ 6 ವರ್ಷಗಳಲ್ಲಿ ಒಟ್ಟು ಕನಿಷ್ಠ 3 ವರ್ಷಗಳ ಕಾಲ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.
ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ನಮೂನೆ 19 ಅನ್ನು ಭರ್ತಿ ಮಾಡಿ, ತಮ್ಮ ಸಂಸ್ಥೆಯಿಂದ ಪಡೆದ ಅನುಬಂಧ-2 ರ ಪ್ರಮಾಣಪತ್ರದೊಂದಿಗೆ ಸಲ್ಲಿಸಬೇಕು ಎಂದು ತಹಸೀಲ್ದಾರ್ ತಿಳಿಸಿದ್ದಾರೆ.
ವರದಿ: ಜಗದೀಶ್ ಕುಮಾರ್ ಭೂಮಾ




















