ಬಳ್ಳಾರಿ / ಕಂಪ್ಲಿ : ಅತಿಥಿ ಉಪನ್ಯಾಸಕ ಮಾಸಿಕ ಗೌರವ ಧನವನ್ನು 14ರಿಂದ 30 ಸಾವಿರ ರೂ. ಗಳಿಗೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಗಳ ಈಡೇರಿಕೆಗಾಗಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದು ಧ್ವನಿ ಎತ್ತುವಂತೆ ಆಗ್ರಹಿಸಿ ಕಂಪ್ಲಿಯಲ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಮನವಿ ಪತ್ರವನ್ನು ಸಲ್ಲಿಸಿದರು.
ಸಂಘಟನೆಯ ಜಂಟಿ ಕಾರ್ಯದರ್ಶಿ ಎಸ್.ಜಿ.ನಾಗರತ್ನ ಮಾತನಾಡಿ, ಸೇವಾ ಹಿರಿತನ ಪರಿಗಣಿಸಿ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರೆಸಬೇಕು, ಅತಿಥಿ ಉಪನ್ಯಾಸಕಿರಿಗೆ ಹೆರಿಗೆ ಸಂದರ್ಭದಲ್ಲಿ ಸರ್ಕಾರಿ ಉಪನ್ಯಾಸಕಿಯರಿಗೆ ಸಿಗುವ ಸೌಲಭ್ಯಗಳನ್ನು ಕಲ್ಪಿಸಬೇಕು. ಕಾರ್ಯಭಾರ ಕಡಿಮೆ ಇರುವ ಕಾಯಂ ಉಪನ್ಯಾಸಕರನ್ನು ನಿಯೋಜಿಸಬೇಕು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ವಿದ್ಯಾರ್ಥಿಗಳ ದಾಖಲಾತಿ ಕಾಲೇಜಿನ ಕೆಲಸಗಳನ್ನು ನಿರ್ವಹಿಸುವದರೊಂದಿಗೆ ಉತ್ತಮ ಫಲಿತಾಂಶ ಪಡೆಯುವಲ್ಲಿ ಅತಿಥಿ ಉಪನ್ಯಾಸಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ಕಂಪ್ಲಿ, ಕುರುಗೋಡು ಭಾಗದ ಎಲ್ಲಾ ಅತಿಥಿ ಉಪನ್ಯಾಸಕರ ಸಭೆ ಕರೆದು ಸಮಸ್ಯೆಗಳ ಮಾಹಿತಿ ಪಡೆದು ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳು, ಸಚಿವರೊಂದಿಗೆ ಚರ್ಚಿಸುವೆ ಹಾಗೂ ಅಧಿವೇಶನದಲ್ಲಿ ಈ ಬಗ್ಗೆ ಸಮಗ್ರವಾಗಿ ಪ್ರಸ್ತಾಪಿಸುವುದಾಗಿ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಬಿ.ಕ.ಜಡೆಪ್ಪ, ಕಾಶೀಮಪ್ಪ, ಅಂಗಡಿ ನಿರಂಜನ, ಗಜೇಂದ್ರ. ಜಿ.ಶಿವಕುಮಾರ್ ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















