ಬಳ್ಳಾರಿ / ಕಂಪ್ಲಿ : 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮಂಡಿಸಿದಂತೆ ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ಅನುದಾನಿತ ನೌಕರರ ವಿವಿಧ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವಂತೆ ಆಗ್ರಹಿಸಿ, ಡಿ. 17ರಂದು ಬೆಳಗಾವಿಯಲ್ಲಿ ಅಖಿಲ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘವು ಬೆಳಗಾವಿ ಚಲೋ-ಬೃಹತ್ ಧರಣಿ ಸತ್ಯಾಗ್ರಹವನ್ನು ನಡೆಸಲಿದೆ. ರಾಜ್ಯಾದ್ಯಂತ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಹಾಗೂ ಪಿಂಚಣಿ ವಂಚಿತರು ಈ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಅಖಿಲ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಅಂಬಿಗರ ಮಂಜುನಾಥ ತಿಳಿಸಿದ್ದಾರೆ.
ಅನುದಾನಿತ ನೌಕರರ ಅನುದಾನ ರಹಿತ ಅವಧಿಯ ಸೇವೆಯನ್ನು ಪಿಂಚಣಿ ಮತ್ತಿತರ ಸೌಲಭ್ಯಕ್ಕೆ ಪರಿಗಣಿಸುವಂತೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕಾಲ್ಪನಿಕ ವೇತನ ಪ್ರಕರಣವನ್ನು ವಿನಾಕಾರಣ ವಿಳಂಬ ಮಾಡದೆ (ಯಾವುದೇ ಹಿಂಬಾಕಿ ನೀಡದಂತೆ) ಕೇವಲ ಪಿಂಚಣಿ ಸೌಲಭ್ಯಕ್ಕೆ ಮಾತ್ರ ಪರಿಗಣಿಸಿ ಆದೇಶಿಸಬೇಕು. ಆ ಮೂಲಕ ದಿ.01-04-2006 ಕ್ಕಿಂತ ಮುಂಚೆ ನೇಮಕವಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಬೇಕು. ಸರ್ಕಾರವು ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ (ಒಪಿಎಸ್) ಜಾರಿಗೆ ತರಬೇಕು.ಸರ್ಕಾರಿ ನೌಕರರಿಗೆ ನೀಡುತ್ತಿರುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೂ ವಿಸ್ತರಿಸಬೇಕು. ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಬೋಧಕೇತರ ಹುದ್ದೆಗಳನ್ನು ಶೀಘ್ರದಲ್ಲೇ ತುಂಬಿಕೊಳ್ಳಲು ಅನುಮತಿಸಬೇಕು. ಅನುದಾನಿತ ಸಂಸ್ಥೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಪಟ್ಟ ಗೊಂದಲಗಳನ್ನು ನಿವಾರಿಸಿ ವಿನಾಯಿತಿ ನೀಡಬೇಕು. ಮಕ್ಕಳ ಸಂಖ್ಯೆ ಕೊರತೆಯಿಂದ ಹೆಚ್ಚುವರಿಯಾದ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಶಾಲಾ-ಕಾಲೇಜುಗಳಿಗೆ ನಿಯೋಜನೆ ಮಾಡಬೇಕು. ಸರ್ಕಾರಿ ಶಾಲಾ ಕಾಲೇಜುಗಳ ಮಕ್ಕಳಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲೆಗಳಿಗೆ ತಾರತಮ್ಯವಿಲ್ಲದೆ ನೀಡಬೇಕು. ಸರ್ಕಾರಿ ಮತ್ತು ಅನುದಾನಿತ ನೌಕರರ ಮಧ್ಯೆ ಯಾವುದೇ ತಾರತಮ್ಯ ಮಾಡಬಾರದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















