ಕಂಪ್ಲಿ: ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಗೋಡ್ಹಾಳ್ ಗ್ರಾಮದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಶೆಡ್ ತೆರವುಗೊಳಿಸುವಂತೆ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘದ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ದೊಡ್ಡ ಬಸವರಾಜ ಬಡಗಿ ಆಗ್ರಹಿಸಿದರು.
ಅವರು ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಬೆಳಗೋಡ್ಹಾಳ್ ಗ್ರಾಮದಲ್ಲಿ ಅಕ್ರಮವಾಗಿ ವ್ಯಕ್ತಿಯೊಬ್ಬರು ಶೆಡ್ ನಿರ್ಮಾಣ ಮಾಡಿದ್ದು, ಈ ಶೇಡ್ಗೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯಿತಿ ಡಿಮ್ಯಾಂಡ್ ರಿಜಿಸ್ಟರ್ನಲ್ಲಿ ದಾಖಲಾತಿಗಳು ಇರುವುದಿಲ್ಲ. ಯಾವುದೇ ಪುರಾವೆ ದಾಖಲೆಗಳು ಇಲ್ಲ. ಇಲ್ಲಿನ ವ್ಯಕ್ತಿಯು ಸರ್ಕಾರಿ ಜಾಗದಲ್ಲಿ ಶೆಡ್ ನಿರ್ಮಿಸಿದ್ದು ಕಾರು ಬಿಡುವುದಕ್ಕೆ ಮಾಡಿಕೊಂಡಿದ್ದಾನೆ. ಈಗಾಗಲೇ ಹಲವಾರು ಬಾರಿ ಮೌಖಿಕವಾಗಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿ.ಡಿ.ಓ)ಗಳಿಗೆ ತಿಳಿಸಿರುವೆ, ಆದರೆ, ಅಧಿಕಾರಿಗಳು ಮೌನವಹಿಸಿರುವುದು ವಿಪರ್ಯಾಸದ ಸಂಗತಿಯಾಗಿದೆ. ಶೆಡ್ ತೆರವಿಗೆ ಹಲವು ಬಾರಿ ದೂರು ನೀಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಶೆಡ್ ತೆರವು ಮಾಡಬೇಕು. ಇಲ್ಲವಾದಲ್ಲಿ ಶೆಡ್ ಪಕ್ಕದಲ್ಲಿರುವ ಖಾಲಿ ಜಾಗವನ್ನು ಸಹ ಜನರು ಅತಿಕ್ರಮಣ ಮಾಡಿಕೊಳ್ಳಲಿದ್ದಾರೆ. ಆದ್ದರಿಂದ ಕೂಡಲೇ ಅಧಿಕಾರಿಗಳು ಶೆಡ್ ತೆರವುಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಕಾನೂನು ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















