ಚಾಮರಾಜನಗರ- ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಟಗರಪುರ ಮೋಳೆಯ ಸಿಲ್ಕಲ್ಪುರ, ಕಜ್ಜಿಹುಂಡಿ, ಕಟ್ನವಾಡಿ, ಕೆಸ್ತೂರು, ಕುಣಗಳ್ಳಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು. ನಂತರ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ಮಂಜೂರು ಮಾಡಿದ್ದಾರೆ. ಕಳೆದ ಸಾಲಿನಲ್ಲಿ ನೀಡಿದ್ದ ೨೫ ಕೋಟಿ. ರೂ. ಅನುದಾನವನ್ನು ಎಲ್ಲಾ ಧರ್ಮದ ಎಲ್ಲ ವರ್ಗದ ಸಮುದಾಯ ಭವನಗಳ ನಿರ್ಮಾಣಕ್ಕೆ ನೀಡಿದ್ದೇನೆ.
ಎಲ್ಲ ಧರ್ಮದ ಎಲ್ಲ ವರ್ಗದವರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದೇನೆ. ಯಾವುದೇ ತಾರತಮ್ಯ, ಭೇದಭಾವ ಮಾಡದೆ. ಅನುದಾನವನ್ನು ಸಮನಾಗಿ ಹಂಚಿಕೆ ಮಾಡಿದ್ದೇನೆ. ಈ ಬಾರಿ ಮುಖ್ಯಮಂತ್ರಿಯವರು ನಮ್ಮ ಕ್ಷೇತ್ರದ ಅಭಿವೃದ್ಧಿಗೆ ೫೦ ಕೋಟಿ ರೂ. ಅನುದಾನವನ್ನು ನೀಡಿದ್ದು ಈ ಅನುದಾನವನ್ನು ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ನಮ್ಮ ಕ್ಷೇತ್ರ ವ್ಯಾಪ್ತಿಯ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ.
ಗ್ರಾಮೀಣ ಪ್ರದೇಶಗಳ, ಪಟ್ಟಣ ಪ್ರದೇಶಗಳ, ನಗರಸಭಾ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಈ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು, ಸಿಲ್ಕಲ್ಪುರ ಗ್ರಾಮದಲ್ಲಿ ಸುಮಾರು ೪೩.೩೦ ಲಕ್ಷ ರೂ.ವೆಚ್ಚದಲ್ಲಿ ಹಾಗೂ ಕುಣಗಳ್ಳಿ ಗ್ರಾಮದಲ್ಲಿ ಸುಮಾರು ೪೬.೦೩ ಲಕ್ಷ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಚಾಲನೆ ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಇರುವ ಕಡೆ ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುವುದು. ಚೆಕ್ ಡ್ಯಾಂ ನಿರ್ಮಾಣದಿಂದ ಮಳೆಯ ನೀರನ್ನು ಸಂಗ್ರಹಣೆ ಮಾಡಬಹುದಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ಅನುಕೂಲವಾಗಲಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ರವರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಯಳಂದೂರು ತಾಲ್ಲೂಕು ಅಧ್ಯಕ್ಷ ಪ್ರಭುಪ್ರಸಾದ್, ಕೊಳ್ಳೇಗಾಲ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ಸಣ್ಣ ನೀರಾವರಿ ಇಲಾಖೆಯ ಎ.ಇ.ಇ. ಅಭಿಲಾಷ್, ಕಾಡಾ ಅಧ್ಯಕ್ಷ ಮರಿಸ್ವಾಮಿ, ಗುತ್ತಿಗೆದಾರ ರೇವಣ್ಣ, ವಿವಿಧ ಗ್ರಾಮಗಳ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು ಹಾಜರಿದ್ದರು.
ವರದಿ ಉಸ್ಮಾನ್ ಖಾನ್



















