ಬಳ್ಳಾರಿ / ಕಂಪ್ಲಿ: ಪಟ್ಟಣದ ಐತಿಹಾಸಿಕ ಸೋಮಪ್ಪ ಕೆರೆ ಅಂಗಳದಲ್ಲಿರುವ ಜಾಗದಲ್ಲಿ ಸುಮಾರು 5 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಇದರಿಂದ ಕ್ರೀಡಾಪಟುಗಳಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.
ಅವರು ಮಂಗಳವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಇಲ್ಲಿನ ಕ್ರೀಡಾಂಗಣದಲ್ಲಿ ಬಾಸ್ಕೇಟ್ ಬಾಲ್, ವ್ಯಾಯಾಮ, ಬ್ಯಾಡ್ಮಿಂಟನ್, ಧ್ಯಾನ ಕೇಂದ್ರ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಕಂಪ್ಲಿ ಮತ್ತು ಕುರುಗೋಡಿನಲ್ಲಿ ಕ್ರೀಡೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ. ಯುವಕರಲ್ಲಿ ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ಇದೆ. ಪ್ರತಿಯೊಂದು ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲಾಗುವುದು. ಯುವಕರು ಶಿಕ್ಷಣದ ಜೊತೆಗೆ ಕ್ರೀಡೆಗಳಿಗೆ ಆಧ್ಯತೆ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಉಪಾಧ್ಯಕ್ಷ ಶರಣಗೌಡ, ಕಂಪ್ಲಿ ಬ್ಲಾಕ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಪುರಸಭೆ ಮಾಜಿ ಸದಸ್ಯ ಸಿ.ಆರ್.ಹನುಮಂತ, ಮುಖಂಡರಾದ ಕೆ.ಷಣ್ಮುಖಪ್ಪ, ರಾಘವೇಂದ್ರ, ಪೇಂಟರ್ ಮಸ್ತಾನ್ ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















