ಬಳ್ಳಾರಿ / ಕುರುಗೋಡು: ವಿವಿಧ ಬೇಡಿಕೆಗಳನ್ನು
ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ವೃಂದಗಳ ಸಂಘ ಶನಿವಾರ ತಹಶಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿತು.
ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ ಜವಳಿ ಮಾತನಾಡಿ ಬಡ್ತಿಯಲ್ಲಿ ವಿಳಂಬ, ಸಿಬ್ಬಂದಿ ಕೊರತೆ, ಔಷಧ ಪೂರೈಕೆ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆರೋಗ್ಯ ಸಿಬ್ಬಂದಿಗಳು ಮುಷ್ಕರಕ್ಕೆ ಮುಂದಾಗಿದ್ದು, ಕರ್ತವ್ಯದ ಅವಧಿಯಲ್ಲಿ ಗೈರಾಗಿ ಸಾಮೂಹಿಕ ಮುಷ್ಕರ ಕೈಗೊಳ್ಳಲಿದೆ. ಇದೇ ಮಾರ್ಚ್ 11 ರಿಂದ 15 ರವರೆಗೆ ಕಪ್ಪು ಪಟ್ಟಿ ಧರಿಸಿ, ಹೊರರೋಗಿ ಸೇವೆ ನೀಡದೇ ಕೇವಲ ತುರ್ತು ಸೇವೆ ಮಾತ್ರ ಒದಗಿಸುತ್ತೇವೆ. ಮಾರ್ಚ್ 16 ರಿಂದ ಅನಿರ್ದಿಷ್ಟ ಅವಧಿಯವರೆಗೆ ಮುಷ್ಕರವಿದ್ದು ಸರ್ಕಾರ ನಮ್ಮ ಬೇಡಿಕೆ ಈಡೇರಿಸಬೇಕು.
ವರ್ಷಗಳಿಂದ ಬಡ್ತಿಗಳನ್ನು ಸ್ಥಗಿತಗೊಳಿಸಲಾಗಿದ್ದು, ಇದರಿಂದಾಗಿ ಕೆಲವರು ವೃತ್ತಿ ಪ್ರಗತಿಯಿಲ್ಲದೆ ನಿವೃತ್ತರಾ ಗುವಂತಾಗಿದೆ. ಹಲವು ಹುದ್ದೆಗಳು ಖಾಲಿಯಿದ್ದು,
ಇದರಿಂದ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮೇಲೆ ಹೊರೆ ಹೆಚ್ಚಾಗುವಂತೆ ಮಾಡಿದೆ.
ಇದಲ್ಲದೆ, ಅಗತ್ಯ ಔಷಧಿಗಳ ಸರಬರಾಜು ಆಗುತ್ತಿಲ್ಲ. ಕೆಲವು ಆಸ್ಪತ್ರೆಗಳು ತಾತ್ಕಾಲಿಕ ನಿಧಿಯಿಂದ ಔಷಧಿ ಖರೀದಿಸುವಂತಾಗುತ್ತಿದೆ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಬಾಕಿ ಪಾವತಿಗಳು ವಿಳಂಬವಾಗಿವೆ ಎಂದು ತಿಳಿಸಿದರು. ಈ ವೇಳೆ ಮನವಿ ಸ್ವೀಕರಿಸಿದ ತಹಶೀಲ್ದಾರ್ ನರಸಪ್ಪ ಮಾತನಾಡಿ ಸರ್ಕಾರಕ್ಕೆ ಮನವಿ ಕಳುಹಿಸಿಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಆಸ್ಪತ್ರೆ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು, ಎಲ್ಲಾ ವೃಂದದ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಚುನಾಯಿತ ಸದಸ್ಯರು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















