ಬಳ್ಳಾರಿ : ಕಲ್ಯಾಣ ಕರ್ನಾಟಕದ ಎಲ್ಲಾ ಅನುದಾನ ರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಬಂದ್ ಮಾಡಿ ಮತ್ತು ಅನುದಾನಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಸಂಘ (ರಿ.) ದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ನಂತರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಸವಿವರವಾದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಕೇಂದ್ರ ಸ್ಥಾನಿಕ ಅಧಿಕಾರಿಗೆ ಸಲ್ಲಿಸಿದರು.
ಕಳೆದ 30 ವರ್ಷಗಳಿಂದ (1995 ರಿಂದ) ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ ಸದರಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳಸಿಕೊಂಡು ಬರಲಾಗುತ್ತಿದೆ. ಸದರಿ ಶಾಲೆಗಳಿಗೆ ಯಾವುದೇ ಸರ್ಕಾರಿ ಅನುದಾನ ಲಭ್ಯವಾಗಿಲ್ಲ ಎಂದು ಹೇಳಿರುವ ಅವರು, ಕಳೆದ ಒಂದು ವರ್ಷದಿಂದ ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿಗಳು ಅನುದಾನ ನೀಡುವ ಭರವಸೆ ನೀಡಿದ್ದರು. ಆದರೆ ಇತ್ತೀಚಿನ ಬಜೆಟ್ ಘೋಷಣೆಯಲ್ಲಿ ಈ ಕುರಿತಂತೆ ಯಾವುದೇ ಅನುದಾನ ನೀಡುವ ಬಗ್ಗೆ ಪ್ರಸ್ತಾಪವಿಲ್ಲದಿರುವುದು ಸಂಕಷ್ಟಕ್ಕೆ ದೂಡಿದೆ ಎಂದು ಅವರು ಮನವಿ ಪತ್ರದಲ್ಲಿ ಹೇಳಿದ್ದಾರೆ.
1995ರ ಸಂತರದ ಎಲ್ಲಾ ಕಲ್ಯಾಣ ಕರ್ನಾಟಕದ ಕನ್ನಡ ಮಾಧ್ಯಮ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನುದಾನ ನೀಡಬೇಕು. ಪ್ರಥಮ ಭಾಷೆಯಾಗಿ ಕನ್ನಡವನ್ನು ಬೋಧಿಸುತ್ತಿರುವ ಕಲ್ಯಾಣ ಕರ್ನಾಟಕದ ಎಲ್ಲಾ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಮಹಾರಾಷ್ಟ್ರ ಮಾದರಿಯಲ್ಲಿ (50:50) ಅರ್ಧ ವೇತನವನ್ನು ನೀಡಬೇಕು.
ಕಲ್ಯಾಣ ಕರ್ನಾಟಕದ ಕನ್ನಡ ಮಾಧ್ಯಮ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನವೀಕರಣದ ನಿಯಮ ನಿಬಂಧನೆಗಳಲ್ಲಿ ಸಡಿಲಿಕೆ ಮಾಡಬೇಕು. ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಖಿಇ ಮರು ಜಾರಿ ಮಾಡಬೇಕು ಹಾಗೂ ಸರಕಾರಿ ಶಾಲೆಗಳಿಗೆ ನೀಡುವ ಎಲ್ಲಾ ಸವಲತ್ತುಗಳನ್ನು ನೀಡಬೇಕು.
ಪ್ರಥಮ ಭಾಷೆಯಾಗಿ ಕನ್ನಡವನ್ನು ಬೋಧಿಸುತ್ತಿರುವ ಕಲ್ಯಾಣ ಕರ್ನಾಟಕದ ಎಲ್ಲಾ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ 371 ಜೆ ಅಡಿಯಲ್ಲಿ ಅನುದಾನವನ್ನು ನೀಡಬೇಕು. ಶಾಲಾ ಮಕ್ಕಳನ್ನು ಮಾತ್ರ ಕರೆತರುವುದಕ್ಕಾಗಿ ಹೊಸದಾಗಿ ಶೋ-ರೂಮ್ ನಿಂದ ಖರೀದಿಸಿದ ಶಾಲಾ ವಾಹನಗಳ ಯುಕ್ತತೆಯ, ಬಾಳಿಕೆ ಅವಧಿಯನ್ನು 15 ವರ್ಷದಿಂದ 30 ವರ್ಷಗಳಿಗೆ ಹೆಚ್ಚಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ಗಳು ಸದರಿ ಅನುದಾನರಹಿತ ಶಾಲೆಗಳಿಗೆ ಕೊಲಾಟ್ರಲ್ ಸಕ್ಯೂರಿಟಿ ಕೇಳದೆ ಮೂಲ ಸೌಕರ್ಯಗಳಿಗಾಗಿ ಸಾಲ ಸೌಲಭ್ಯಗಳು ನೀಡುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಕರ್ನಾಟಕದಲ್ಲಿ ಶಿಕ್ಷಣವನ್ನು ನೀಡುವಲ್ಲಿ 50% ಗಿಂತಲೂ ಹೆಚ್ಚು ಮಕ್ಕಳು ಮಕ್ಕಳು ಖಾಸಗಿ ಶಾಲೆಗಳಲ್ಲಿ ಬೋಧನೆ ಪಡೆಯುತ್ತಿದ್ದಾರೆ ಸದರಿ ಖಾಸಗಿ ಶಾಲೆಗಳ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ರಚಿಸಬೇಕು. ಕನ್ನಡ ಭಾಷೆಯನ್ನು ಬೆಳೆಸುವುದಕ್ಕಾಗಿ ಸದರಿ ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಈ ಮುಖೇನ ಮತ್ತು ಮೇಲಿನ ಬೇಡಿಕೆಗಳನ್ನು ಈಡೇರಿಸುವ ಮೂಲಕ ಕನ್ನಡ ಭಾಷೆ ಮತ್ತು ಕಲ್ಯಾಣ ಕರ್ನಾಟಕದ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಉಳಿಸಿ-ಬೆಳಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಒಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ 2026-27ನೇ ಸಾಲಿನಲ್ಲಿ “ಪ್ರತ್ಯೇಕ ಕಲ್ಯಾಣ ಕರ್ನಾಟಕ”ಕ್ಕಾಗಿ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗಿರುತ್ತದೆ ಎಂದು ಪ್ರತಿಭಟನಾಕಾರರು ಸಿಎಂಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಹೇಳಿದ್ದಾರೆ.
ಪ್ರತಿಭಟನೆ ಹಾಗೂ ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಗೌರವಧ್ಯಕ್ಷ ಎ.ತಾಂಡವ ಕೃಷ್ಣ, ಸದರಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಸುರೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಮಾರುತಿ, ವಿಭಾಗೀಯ ಖಜಾಂಚಿ ನಂದ್ಯಾಳ ಮುತ್ಯಣ್ಣ, ಸಹ ಕಾರ್ಯದರ್ಶಿ ಬಿ.ಜಿಲಾನ್, ಉಪಾಧ್ಯಕ್ಷ ಚಾಂದ್ಭಾಷಾ, ಹಾಗೂ ಮುಖಂಡರಾದ ಬಸವರಾಜ್.ಸಿ., ಕೆ.ಹನುಮಂತಪ್ಪ ಮತ್ತಿತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















