ಬಳ್ಳಾರಿ / ಕಂಪ್ಲಿ : ಮಕ್ಕಳಿಗೆ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ಅಗತ್ಯ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ಪಟ್ಟಣದ ವಾಲ್ಮೀಕಿ ವೃತ್ತದ ಬಳಿಯ ಹೊಸಪೇಟೆ ಬೈಪಾಸ್ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರುಗಡೆಯಲ್ಲಿರುವ ಶ್ರೀನಿಧಿ ಎಜ್ಯುಕೇಶನ್ ಟ್ರಸ್ಟ್ನ ಹಲೋ ಕಿಡ್ಸ್ ಶೌರ್ಯ ವಿದ್ಯಾಲಯ (ಸ್ಕೂಲ್)ವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಇಂಗ್ಲಿಷ್ ಶಿಕ್ಷಣವೊಂದೇ ಮುಖ್ಯವಲ್ಲ. ಅಂಕಪಟ್ಟಿಗೆ ಸೀಮಿತಗೊಳಿಸದೆ ಎಲ್ಲಾ ಆಯಾಮಗಳಲ್ಲೂ ಮಕ್ಕಳು ಸರ್ವಾಂಗೀಣ ಪ್ರಗತಿ ಸಾಧಿಸಲು ಪೂರಕ ವಾತಾವರಣ ಕಲ್ಪಿಸಬೇಕು. ಪೋಷಕರು ಕೂಡ ಮನೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ, ಮಕ್ಕಳ ಅಭಿರುಚಿ ಗಮನಿಸಿ ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕು. ಇತ್ತೀಚಿನ ದಿನಮಾನದಲ್ಲಿ ಮಕ್ಕಳು ಮೊಬೈಲ್ ದಾಸರಾಗಿದ್ದಾರೆ. ಆದ್ದರಿಂದ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವಿದೆ. ಆದ್ದರಿಂದ ಮಕ್ಕಳಿಗೆ ಕಲಿಕಾ ಹಂತದಲ್ಲಿ ಒಳ್ಳೆಯ ಶಿಕ್ಷಣ ನೀಡುವ ಜೊತೆಗೆ ಸಂಸ್ಕೃತಿ, ಸಂಸ್ಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನೂತನ ಸಂಸ್ಥೆಯ ಮಕ್ಕಳಿಗೆ ಎಲ್.ಕೆ.ಜಿ ಮತ್ತು ಯುಕೆಜಿಯಿಂದಲೇ ಒಳ್ಳೆಯ ಶಿಕ್ಷಣ ನೀಡುವ ಭರವಸೆ ಜೊತೆಗೆ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದರು.
ನೂತನ ಶಾಲೆಯ ಮುಖ್ಯ ಶಿಕ್ಷಕಿ ಬಿ.ದುರ್ಗಾಲಕ್ಷ್ಮಿ ಮಾತನಾಡಿ, ಚಿಕ್ಕಮಕ್ಕಳಿಗೆ ಸುಲಭದ ರೀತಿಯಲ್ಲಿ ಶಿಕ್ಷಣ ನೀಡಲಾಗುವುದು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕೆಂಬ ನಿಟ್ಟಿನಲ್ಲಿ ನೂತನ ಶಾಲೆಯನ್ನು ಆರಂಭಿಸಲಾಗಿದೆ. ನುರಿತ ಶಿಕ್ಷಕರಿಂದ ಶಿಕ್ಷಣ ನೀಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಗ್ಯಾರಂಟಿ ಯೋಜನೆಯ ತಾಲೂಕು ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಮುಖಂಡರಾದ ಕೆ.ಎಸ್.ಚಾಂದ್ ಬಾಷಾ ಸೇರಿದಂತೆ ಮುಖಂಡರು, ಪೋಷಕರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















