ಗದಗ/ ರೋಣ : ತಾಲೂಕು ಪಂಚಾಯತಿ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಮಹತ್ವಪೂರ್ಣ ಚಿಂತನೆಗಳು ಮತ್ತು ಸಮಾಜ ಪರಿವರ್ತನೆಗೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಯೋಜನಾಧಿಕಾರಿ ಶ್ರೀ ಸಿ. ಎಸ್. ನಿಲಗುಂದ ಅವರು ಮಾತನಾಡಿ, ಡಾ. ಬಿ. ಆರ್. ಅಂಬೇಡ್ಕರ್ ಅವರು ದೇಶಕ್ಕೆ ಸಮಾನ ಹಕ್ಕುಗಳು, ನ್ಯಾಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ನೀಡಿದ ಮಹಾನ್ ನಾಯಕರು ಎಂದು ಹೇಳಿದರು. ಅವರ ತತ್ವಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದ್ದು, ಶಿಕ್ಷಣದ ಮೂಲಕ ವ್ಯಕ್ತಿ ಮತ್ತು ಸಮಾಜ ಎರಡೂ ಪ್ರಗತಿಯನ್ನು ಸಾಧಿಸಬಹುದು ಎಂಬ ಸಂದೇಶವನ್ನು ಅವರು ನೀಡಿದರು ಎಂದು ತಿಳಿಸಿದರು.
ತಾಲೂಕ ಪಂಚಾಯತಿ ಸಹಾಯಕ ಲೆಕ್ಕಾಧಿಕಾರಿಗಳಾದ ದೇವರಾಜ್ ಸಜ್ಜನಶೆಟ್ಟರ ಮಾತನಾಡಿ, ಡಾ. ಅಂಬೇಡ್ಕರ್ ಅವರು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಜೀವನವನ್ನೇ ಅರ್ಪಿಸಿದ ಮಹನೀಯರಾಗಿದ್ದಾರೆ, ಭಾರತದಲ್ಲಿ ನಮ್ಮಂತ ಹಿಂದುಳಿದ ಜನರು ಶಿಕ್ಷಣ ಕಲಿತಿದ್ದೇವೆ ಅಂದರೆ ಅದಕ್ಕೆ ಅವರೇ ನೇರ ಕಾರಣ ಈ ಹಿನ್ನೆಲೆ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ತಾಲೂಕು ಪಂಚಾಯತಿ ಸಿಬ್ಬಂದಿಗಳು ಡಾ. ಅಂಬೇಡ್ಕರ್ ಅವರ ತತ್ವಗಳನ್ನು ಅನುಸರಿಸಿ, ಸಮಾನತೆ ಮತ್ತು ಸಹೋದರತ್ವವನ್ನು ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುವ ಪ್ರತಿಜ್ಞೆಯನ್ನು ಕೈಗೊಂಡರು.
ವರದಿ ಶರಣಪ್ಪಗೌಡ ಸಕ್ಕರಗೌಡರ




















